Wednesday, December 6, 2023

Latest Posts

ಜೆಡಿಎಸ್ ನೂತನ ತಾಲೂಕು ಅಧ್ಯಕ್ಷರಿಗೆ ಆದೇಶ ಪತ್ರ ವಿತರಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್

ಹೊಸದಿಗಂತ ವರದಿ, ಬೀದರ್
ಜೆಡಿಎಸ್ ಪಕ್ಷದ ಔರಾದ್ ತಾಲೂಕು ನೂತನ ಅಧ್ಯಕ್ಷರಾಗಿ ನೇಮಕಗೊಂಡ ತಾನಾಜಿ ತೋರಣೆಕರ್, ಬಾಲ್ಕಿ ತಾಲೂಕು ಅಧ್ಯಕ್ಷರಾಗಿ ನೇಮಕಗೊಂಡ ಮಲ್ಲಿಕಾರ್ಜುನ ನೆಳಗೆ, ಬಸವಕಲ್ಯಾಣ ತಾಲೂಕು ಅಧ್ಯಕ್ಷರಾಗಿ ನೇಮಕಗೊಂಡ ಹರ್ಷದ್ ಅಲಿ ಮಾಗಾವೆರವರಿಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಆದೇಶ ಪತ್ರ ನೀಡಿ ಅಭಿನಂದಿಸಿದರು.
ನೂತನವಾಗಿ ನೇಮಕಗೊಂಡ ಮೂರು ತಾಲೂಕುಗಳ ಜೆಡಿಎಸ್ ತಾಲೂಕು ಅಧ್ಯಕ್ಷರಿಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ಶಾಸಕ ಬಂಡೆಪ್ಪ ಖಾಶೆಂಪುರ್ ರವರ ನಿವಾಸದಲ್ಲಿ ಮಂಗಳವಾರ ಆದೇಶ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ , ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಬಲಿಷ್ಠಗೊಳಿಸುವ ಕೆಲಸವಾಗಬೇಕಾಗಿದೆ. ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಪಕ್ಷ ಸಂಘಟನೆ, ಬಲವರ್ಧನೆಗೆ ಒತ್ತು ನೀಡಬೇಕು. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಬೇಕು. ಪ್ರತಿಯೊಬ್ಬರಿಗೂ ಜೆಡಿಎಸ್ ಪಕ್ಷದ ದೇಯೋದ್ದೇಶಗಳನ್ನು ತಿಳಿಸಿ ಹೇಳುವ ಕೆಲಸ ಮಾಡಬೇಕು.
ಪಕ್ಷದ ರಾಷ್ಟ್ರಾಧ್ಯಕ್ಷರ, ರಾಜ್ಯಾಧ್ಯಕ್ಷರ ಮತ್ತು ಜಿಲ್ಲಾಧ್ಯಕ್ಷರ ಮಾರ್ಗದರ್ಶನದೊಟ್ಟಿಗೆ ಕೆಲಸ ಮಾಡಬೇಕು. ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು. ಎಲ್ಲರೂ ಸೇರಿ ಮುಂದಿನ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕಾಗಿದೆ ಎಂದು ಕರೆನೀಡಿದರು.
ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ರಮೇಶ ಪಾಟೀಲ್ ಸೋಲಪೂರ್ ರವರು ಮಾತನಾಡಿ, ಪಕ್ಷದ ನಾಯಕರೆಲ್ಲರೂ ಚರ್ಚಿಸಿ ನೂತನ ತಾಲೂಕು ಅಧ್ಯಕ್ಷರನ್ನು ಆಯ್ಕೆ ಮಾಡಿದ್ದೇವೆ. ಪಕ್ಷ ಸಂಘಟನೆಯೇ ನೂತನ ಪದಾಧಿಕಾರಿಗಳ ಪ್ರಮುಖ ಆದ್ಯತೆಯಾಗಿರುತ್ತದೆ. ಆ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು. ಬೀದರ್ ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕಾಗಿದೆ. ಪ್ರತಿಯೊಂದು ಹಳ್ಳಿಗಳಲ್ಲಿಯೂ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿರುವ ಜನಪರ ಕೆಲಸಗಳ ಬಗ್ಗೆ ಮಾಹಿತಿ ನೀಡೋಣ. ಮುಂಬರುವ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡೋಣ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಪ್ರಮುಖರು ಸೇರಿದಂತೆ ಅನೇಕರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!