ಮಂಚ’ದ ಹೇಳಿಕೆ- ಪ್ರಿಯಾಂಕ್ ಖರ್ಗೆ ಕ್ಷಮೆ ಕೇಳದಿದ್ದರೆ ಚಿತ್ತಾಪುರ ಚಲೋ ಮಾಡಲಿದೆ ಬಿಜೆಪಿ ಮಹಿಳಾ ಮೋರ್ಚ

ಹೊಸದಿಗಂತ ಡಿಜಟಲ್‌ ಡೆಸ್ಕ್, ಬೆಂಗಳೂರು:
ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯಿಂದ ಮಹಿಲೆಯರಿಗೆ ಅವಮಾನವಾಗಿದೆ. ಅವರು ಈ ಕೂಡಲೇ ಕ್ಷಮೆಯಾಚಿಸದಿದ್ದರೆ ಕೇಳದಿದ್ದರೆ ಚಿತ್ತಾಪುರ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರು ಎಚ್ಚರಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ ಈಗಾಗಲೇ 17 ಜಿಲ್ಲೆಗಳಲ್ಲಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಆದರೂ ಪ್ರಿಯಾಂಕ್ ಖರ್ಗೆ ಅವರು ಮನಃಪೂರ್ವಕವಾಗಿ ಕ್ಷಮೆ ಕೇಳಿಲ್ಲ. ಅವರ ವರ್ತನೆಯನ್ನು ದೇಶದ ಮಹಿಳೆಯರ ಪರವಾಗಿ ಖಂಡಿಸುವುದಾಗಿ ಅವರು ಹೇಳಿದರು.
ಸರಕಾರಿ ನೌಕರಿ ಪಡೆಯಲು ಮಹಿಳೆಯರು ಮಂಚ ಏರಬೇಕು ಹಾಗೂ ಯುವಕರು ಲಂಚ ಕೊಡಬೇಕೆಂದು ಹೇಳುವ ಮೂಲಕ ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ ಪಕ್ಷದ ಕೀಳು ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಇದು ಅತ್ಯಂತ ಖಂಡನಾರ್ಹ ಎಂದು ಗೀತಾ ವಾಗ್ದಾಳಿ ನಡೆಸಿದರು.
ಪ್ರಿಯಾಂಕ್ ಖರ್ಗೆ ಅವರು ತಮ್ಮನ್ನು ಚಾಲ್ತಿಯಲ್ಲಿ ಇರಿಸಿಕೊಳ್ಳಲು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇನ್ನಾದರೂ ಮಹಿಳೆಯರ ಕುರಿತು ಗೌರವದಿಂದ ಮಾತನಾಡಬೇಕೆಂದು ಆಗ್ರಹಿಸಿದರು. ಈ ರೀತಿಯ ಅಸಭ್ಯ ಪದ ಬಳಸಿದ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಉಗ್ರ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಹಾಗೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಮಹಿಳಾ ಸರಕಾರಿ ನೌಕರರೆಲ್ಲರೂ ಉತ್ತಮ ಕುಟುಂಬದ ಹಿನ್ನೆಲೆಯನ್ನೇ ಹೊಂದಿದ್ದಾರೆ. ಅಲ್ಲದೇ ಪರಿಶ್ರಮದ ಮೂಲಕ ಕೆಲಸ ಪಡೆದು ಉನ್ನತ ಹುದ್ದೆಗಳನ್ನೇರಿದ್ದಾರೆ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಮುಖಂಡ ಅಧೀರ್ ರಂಜನ್ ಚೌಧರಿ ಕೆಲವೇ ದಿನಗಳ ಹಿಂದೆ ರಾಷ್ಟ್ರಪತಿಗಳನ್ನು ‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿ ಅವಮಾನ ಮಾಡಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಅದೇ ಮಾದರಿಯಲ್ಲಿ ಕಾಂಗ್ರೆಸ್ ಪಕ್ಷದವರ ಕೀಳು ಅಭಿರುಚಿಯನ್ನು ಮುಂದುವರೆಸುತ್ತಿರುವುದು ಅತ್ಯಂತ ಬೇಸರ ತಂದಿದೆ. ಹಲವಾರು ಮಹಿಳೆಯರು ತಮ್ಮನ್ನು ಸಂಪರ್ಕಿಸಿ ಈ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ವಕ್ತಾರ ಎಸ್ ಹರೀಶ್, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ಆಶಾ ರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ರೇಖಾ ಗೋವಿಂದ, ಬೆಂಗಳೂರು ದಕ್ಷಿಣ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಆನಂದ್ ಅವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!