ಹೊಸದಿಗಂತ ವರದಿ, ಮಂಗಳೂರು
ನಗರದ ಹೊರ ವಲಯದ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಗಳ ತಂಡ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹಲ್ಲೆನಡೆಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ರಕ್ಷಣೆಗಾಗಿ ಪೊಲೀಸರು ಕೂಡ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ರೌಡಿಗಳು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಸಿಬ್ಬಂದಿಯಾದ ಎಎಸ್ಐ ಡೇವಿಡ್, ಪಿಎಸ್ಐ ನಾಗೇಂದ್ರ, ಹೆಡ್ ಕಾನ್ ಸ್ಟೇಬಲ್ ಸುಧೀರ್ ಪೂಜಾರಿ ಹಾಗೂ ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ, ಮನೋಜ್ ಯಾನೆ ಬಿಂದಾಸ್ ಮನೋಜ್ ಗಾಯಗೊಂಡವರು.
ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಗಳ ಬಂಧನಕ್ಕೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ.
ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ನಗರ ಅಪರಾಧ ಪತ್ತೆದಳದ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ಬಲೆ ಬೀಸಿತ್ತು. ಆರೋಪಿಗಳು ಮೂಲ್ಕಿ ಸಮೀಪವಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಆರೋಪಿಗಳು ಪೊಲೀಸರ ಮೇಲೆಯೇ ದಾಳಿ ನಡೆಸಿ ಪರಾರಿಗೆ ಯತ್ನಿಸಿದ್ದರು. ರಕ್ಷಣೆಗಾಗಿ ಪೊಲೀಸ್ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರು ಆರೋಪಿಗಳಾದ ಅರ್ಜುನ್ ಮತ್ತು ಮನೋಜ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಆರೋಪಿಗಳು ಕುಸಿದು ಬಿದ್ದಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗಾಯಗೊಂಡ ಪೊಲೀಸರು ಮತ್ತು ಇಬ್ಬರು ರೌಡಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ