ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ನಗರದಲ್ಲಿ ನ.19 ರಂದು ಸಂಭವಿಸಿದ ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಆಯಾಮಗಳಲ್ಲಿ ತನಿಖೆ ತೀವ್ರಗೊಂಡಿದೆ. ಪ್ರಕರಣದ ರೂವಾರಿಯಾಗಿರುವ ಉಗ್ರ ಮುಹಮ್ಮದ್ ಶಾರಿಕ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವ ಮಾಹಿತಿ ಲಭಿಸಿದೆ.
ಈ ನಡುವೆ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ಇನ್ನೆರಡು ದಿನದಲ್ಲಿ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ಹಸ್ತಾಂತರವಾಗುವ ಸಾಧ್ಯತೆ ಹೆಚ್ಚಾಗಿದೆ. ಮಂಗಳೂರಿನ ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಬಳಿಕ ಮಂಗಳೂರಿಗೆ ಆಗಮಿಸಿದ್ದ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೆ ಎನ್ಐಗೆ ಹಸ್ತಾಂತರಿಸುವ ಸುಳಿವು ನೀಡಿದ್ದರು.
ಬಳಿಕ ಮುಖ್ಯಮಂತ್ರಿಗಳೊಂದಿಗೆ ಈ ನಿಟ್ಟಿನಲ್ಲಿ ಚರ್ಚೆ ನಡೆದು ಎನ್ಐಎಗೆ ಹಸ್ತಾಂತರಿಸಲಾಗಿತ್ತು. ಇದರ ಮುಂದಿನ ಹಂತವಾಗಿ ಮಂಗಳೂರಿನ 7 ನೇ ಜೆಎಂಎಫ್ಸಿ ನ್ಯಾಯಾಲಯವು ಅಧಿಕೃತ ಆದೇಶ ಹೊರಡಿಸಲಿದೆ. ಅದರ ಬಳಿಕ ಎನ್ಐಎ ಪ್ರಕರಣ ದಾಖಲಿಸಲಿದೆ. ರಾಜ್ಯ ಸರಕಾರ ತನಿಖೆಯನ್ನು ಎನ್ಐಎ ಸುಪರ್ದಿಗೆ ಒಪ್ಪಿಸಿದ ಬಳಿಕ ಈ ತಂಡ ಮಂಗಳೂರಿಗೆ ಆಗಮಿಸಿದೆ. ನ್ಯಾಯಾಲಯದ ಅಧಿಕೃತ ಆದೇಶದ ಬಳಿಕ ತನಿಖೆ ಕೈಗೆತ್ತಿಕೊಳ್ಳಲಿದೆ.