ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿರುಗಾಳಿ ಸಹಿತ ಅಕಾಲಿಕ ಮಳೆ ರೈತರ ಬೆಳೆಗಳಿಗೆ ಭಾರೀ ಹೊಡೆತ ನೀಡಿದ್ದು, ಧಾರವಾಡ ಜಿಲ್ಲೆಯ ಕಲಘಟಗಿ ಭಾಗದಲ್ಲಿ ಮಾವು ತೋಟಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಮಂಗಳವಾರ ಸಂಜೆ ಸುರಿದ ಮಳೆ ಹಾಗೂ ಗಾಳಿಯಿಂದ ತೋಟಗಳಲ್ಲಿನ ಹೂವು, ಮೊಗ್ಗು ಮತ್ತು ಕಾಯಿ ದೊಡ್ಡ ಪ್ರಮಾಣದಲ್ಲಿ ಉದುರಿದ್ದು, ರೈತರಿಗೆ ಆರ್ಥಿಕ ಹೊಡೆತ ನೀಡಿದೆ. ಹಲವು ಗ್ರಾಮಗಳಲ್ಲಿ ಮರಗಳಲ್ಲಿನ ಹೂವುಗಳು ಸಂಪೂರ್ಣವಾಗಿ ಉದುರಿರುವುದು ಕಂಡುಬಂದಿದ್ದು, ಈ ವರ್ಷದ ಉತ್ಪಾದನೆ ಕುಸಿಯುವ ಆತಂಕ ವ್ಯಕ್ತವಾಗಿದೆ.
ಇದನ್ನೂ ಓದಿ:
ಹವಾಮಾನ ಬದಲಾವಣೆಯ ಪರಿಣಾಮದಿಂದ ಇಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಜೋಶಿ ತಿಳಿಸಿದ್ದಾರೆ. ಹೂವು ಉದುರುವಿಕೆ, ಕೀಟಬಾಧೆ ಹಾಗೂ ಹಣ್ಣು ಕೊಳೆಯುವ ಸಮಸ್ಯೆಗಳು ಹೆಚ್ಚುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದ್ದಾರೆ.
ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಗಳಿಗೆ ಭೇಟಿ ನೀಡಿ ಹಾನಿಯ ಸಂಪೂರ್ಣ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಸಮೀಕ್ಷೆ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಕೂಡ ಎಚ್ಚರಿಕೆ ನೀಡಲಾಗಿದೆ.
ಇದಲ್ಲದೆ, ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮೂಲಕ ಪರಿಹಾರ ಒದಗಿಸುವುದಾಗಿ ಭರವಸೆ ನೀಡಲಾಗಿದೆ. ರೈತರು ಆತಂಕಪಡದೆ ಸರ್ಕಾರದ ನೆರವಿಗೆ ನಿರೀಕ್ಷಿಸಬಹುದು ಎಂದು ತಿಳಿಸಿದ್ದಾರೆ.



