ಹೊಸ ದಿಗಂತ ವರದಿ, ಬೀದರ:
ಔರಾದ ಹಾಗೂ ಕಮಲನಗರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯಾಗುತ್ತಿದ್ದು, ಜನ ಮತ್ತು ಜಾನುವಾರುಗಳಿಗೆ ಸಮರ್ಪಕ ನೀರು ಪೂರೈಸಲು ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ ಮಾಡುವಂತೆ ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚೌಹಾಣ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೇಸಿಗೆ ಅವಧಿಯಲ್ಲಿ ಸಹಜವಾಗಿ ನೀರಿನ ಸಮಸ್ಯೆ ಎದುರಾಗುತ್ತದೆ. ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಹರಿಸಿದಲ್ಲಿ ನದಿ ವ್ಯಾಪ್ತಿಯಲ್ಲಿ ಬರುವ ಭಾಲ್ಕಿ ತಾಲ್ಲೂಕಿನ ಕೆಲವು ಗ್ರಾಮಗಳು ಸೇರಿದಂತೆ ಔರಾದ(ಬಿ) ಕ್ಷೇತ್ರದ ಸಂಗಮ, ಜಂಬಗಿ, ಬಳತ್, ಠಾಣಾಕುಶನೂರ, ಹೆಡಗಾಪೂರ ಹಾಗೂ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಕಷ್ಟು ಗ್ರಾಮಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.