ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದೇಶ ಪ್ರವಾಸದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳು ಮತ್ತೆ ದೇಶೀಯ ರಾಜಕೀಯ ಚರ್ಚೆಗೆ ದಾರಿಮಾಡಿಕೊಟ್ಟಿವೆ. ಜರ್ಮನಿಯ ಮ್ಯೂನಿಚ್ನಲ್ಲಿ ಬಿಎಂಡಬ್ಲ್ಯೂ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಬಳಿಕ ಅವರು ಭಾರತದಲ್ಲಿನ ಉತ್ಪಾದನಾ ವಲಯದ ಸ್ಥಿತಿಗತಿಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.
ಮ್ಯೂನಿಚ್ ಪ್ರವಾಸದ ಸಂದರ್ಭ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದು, ಬಲಿಷ್ಠ ಆರ್ಥಿಕತೆಗೆ ಉತ್ಪಾದನೆಯೇ ಮೂಲ ಅಸ್ತಿತ್ವ ಎಂದು ಹೇಳಿದರು. ಆದರೆ ಭಾರತದಲ್ಲಿ ಉತ್ಪಾದನಾ ವಲಯ ನಿರೀಕ್ಷಿತ ವೇಗದಲ್ಲಿ ಬೆಳೆಯುತ್ತಿಲ್ಲ ಎಂಬುದು ವಿಷಾದಕರ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಉತ್ಪಾದನಾ ವಲಯ ಕುಸಿತದಿಂದ ಯುವಜನರಿಗೆ ಅಗತ್ಯವಿರುವ ದೊಡ್ಡ ಪ್ರಮಾಣದ ಉದ್ಯೋಗ ಸೃಷ್ಟಿಗೆ ಅಡ್ಡಿಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರಾಹುಲ್ ಗಾಂಧಿಯ ಈ ಹೇಳಿಕೆಗೆ ಬಿಜೆಪಿ ವಲಯದಿಂದ ತಕ್ಷಣವೇ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಎಕ್ಸ್ನಲ್ಲಿ ಪ್ರತಿಕ್ರಿಯಿಸಿ, ಕಳೆದ ಒಂದು ದಶಕದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ರಫ್ತುಗಳಲ್ಲಿ ಭಾರೀ ಏರಿಕೆ ಕಂಡಿದೆ ಎಂದು ತಿಳಿಸಿದ್ದಾರೆ. 1991ರಿಂದ ವಾಹನ ಉತ್ಪಾದನೆ ಗಣನೀಯವಾಗಿ ಹೆಚ್ಚಾಗಿದ್ದು, ಭಾರತವು 2030ರೊಳಗೆ ವಿಶ್ವದ ಪ್ರಮುಖ ವಾಹನ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗುವ ಗುರಿಯಲ್ಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯ ಹೇಳಿಕೆ ಸುತ್ತ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.

