ಹೊಸದಿಗಂತ ವರದಿ,ಬಳ್ಳಾರಿ:
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ(ಬೂಡಾ) ನೂತನ ಅಧ್ಯಕ್ಷರಾಗಿ ಮಾರುತಿ ಪ್ರಸಾಧ ಶರ್ವಶೆಟ್ಟಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಹಾಲಿ ಅಧ್ಯಕ್ಷ ಕಾರ್ಕಲತೋಟ ಪಾಲನ್ನ ಅವರು ನಗರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುವ ಮೂಲಕ ಎಲ್ಲರ ಗಮನಸೆಳೆದಿದ್ದರು. ಯುವ ಉತ್ಸಾಹಿ, ಯುವ ಮುಖಂಡ ಮಾರುತಿ ಪ್ರಸಾದ್ ಶರ್ವಶೆಟ್ಟಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಸರ್ಕಾರದ ಅಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಯೋಜನೆ, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ.ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶ ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಚಾಲ್ತಿಯಲ್ಲಿರಲಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಅಭಿನಂದನೆ ಸಲ್ಲಿಸುವೆ: ನೂತನ ಅದ್ಯಕ್ಷ ಮಾರುತಿ ಪ್ರಸಾದ್ ಶರ್ವಶೆಟ್ಟಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಸೇವೆ ಗುರುತಿಸಿ ಈ ಹುದ್ದೆಯನ್ನು ನೀಡಿರುವುದು ಸಂತಸ ಮೂಡಿಸಿದೆ. ಸಾಮಾನ್ಯ ಕಾರ್ಯಕರ್ತರನಿಗೂ ಅಧಿಕಾರ ಎನ್ನುವ ಪಾಲಿಸಿ ನಮ್ಮ ಭಾಜಪದಲ್ಲಿದೆ, ನಮ್ಮಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಆದ್ಯತೆ, ಪಕ್ಷಕ್ಕಾಗಿ ಸೇವೆ ಸಲ್ಲಿಸಿದ, ದುಡಿದ ಪ್ರತಿಯೋಬ್ಬ ಕಾರ್ಯಕರ್ತರಿಗೂ ಸ್ಥಾನಮಾನಗಳು ದೊರೆಯಲಿವೆ, ಇದಕ್ಕೆ ನಾನೇ ಉದಾಹರಣೆ, ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ನಮ್ಮ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುವೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜೀ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು, ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್, ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಸಂಸದ ವೈ.ದೇವೇಂದ್ರಪ್ಪ, ಎಮ್ಮೆಲ್ಸಿ ವೈ.ಎಂ.ಸತೀಶ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಮುರಹರಗೌಡ, ಸೇರಿದಂತೆ ಪಕ್ಷದ ಎಲ್ಲ ಗಣ್ಯರಿಗೂ ಅಭಿನಂದನೆಗಳನ್ನು ಸಲ್ಲಿಸುವೆ ಎಂದರು.