ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕೌಶಂಬಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.
ಪಿಪ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಮನುರಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಕಾರ್ಖಾನೆಯ ಸುತ್ತಮುತ್ತಲಿನ ಹಲವು ಮನೆಗಳಿಗೂ ಹಾನಿಯಾಗಿದ್ದು, ಕೆಲವು ಮನೆಗಳು ಕೂಡ ನೆಲಸಮವಾಗಿವೆ.
ಘಟನೆಯ ಮಾಹಿತಿ ತಿಳಿಯುತ್ತಿದಂತೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಖಾನೆಯ ಅವಶೇಷಗಳಡಿ ಸಿಲುಕಿರುವವರಿಗಾಗಿ ತೀವ್ರ ಶೋಧ ಮುಂದುವರಿದಿದೆ.
ಸ್ಫೋಟಗೊಂಡ ಪಟಾಕಿ ಕಾರ್ಖಾನೆ ನಿಜಾಮುದ್ದೀನ್ ಅವರ ಪುತ್ರ ಆದಿಲ್ ಡಿಜೆ ಒಡೆತನದಲ್ಲಿದೆ ಎಂದು ತಿಳಿದುಬಂದಿದೆ. ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಸಂತಾಪ
ಘಟನೆಯ ಬಗ್ಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳಿಗೆ ಸೂಕ್ತ ಹಾಗೂ ತ್ವರಿತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.



