ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭಾರೀ ಸ್ಫೋಟ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.
ಶುಕ್ರವಾರ ರಾತ್ರಿ ನಡೆದ ಈ ದುರಂತದಲ್ಲಿ ಕನಿಷ್ಠ 82 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ. ಸ್ಫೋಟದ ವೇಳೆಯಲ್ಲಿ ಗಣಿಯೊಳಗೆ ನೂರಾರು ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಚೀನಾ ಮಾಧ್ಯಮಗಳು ವರದಿ ಮಾಡಿವೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ತೀವ್ರ ಹೋರಾಟ
ಸ್ಫೋಟದ ಬಳಿಕ ತಕ್ಷಣವೇ ರಕ್ಷಣಾ ತಂಡಗಳು ಸ್ಥಳಕ್ಕಾಗಮಿಸಿ ಹಲವರನ್ನು ಸುರಕ್ಷಿತವಾಗಿ ಹೊರತೆಗೆದವು. ಆದರೆ ಗಣಿಯೊಳಗಿನ ವಿಷಕಾರಿ ಅನಿಲ ಮತ್ತು ದಟ್ಟ ಹೊಗೆಯಿಂದ ಕಾರ್ಯಾಚರಣೆ ಸಂಕೀರ್ಣಗೊಂಡಿತ್ತು.
ಇದನ್ನೂ ಓದಿ:
ಕ್ಸಿ ಜಿನ್ಪಿಂಗ್ ಕಠಿಣ ಸೂಚನೆ
ಘಟನೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ಒದಗಿಸುವಂತೆ ಹಾಗೂ ದುರಂತದ ಸಂಪೂರ್ಣ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸುರಕ್ಷತಾ ನಿಯಮಗಳ ನಿರ್ಲಕ್ಷ್ಯಕ್ಕೆ ಯಾವುದೇ ಕ್ಷಮೆ ಇಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಗಣಿ ಸುರಕ್ಷತೆ ಬಗ್ಗೆ ಮತ್ತೆ ಪ್ರಶ್ನೆ
ಚೀನಾದಲ್ಲಿ ಕಲ್ಲಿದ್ದಲು ಗಣಿಗಳ ಅಪಘಾತಗಳು ಮತ್ತೆ ಆತಂಕ ಹುಟ್ಟಿಸಿವೆ. ಸುರಕ್ಷತಾ ಕ್ರಮಗಳನ್ನು ಬಲಪಡಿಸಿದರೂ, ನಿಯಮ ಉಲ್ಲಂಘನೆ ಮತ್ತು ನಿರ್ಲಕ್ಷ್ಯದಿಂದ ಇಂತಹ ದುರಂತಗಳು ಮರುಕಳಿಸುತ್ತಿವೆ. ಈ ಪ್ರಕರಣದಲ್ಲೂ ಗಣಿಯ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.



