ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಂಡರ್ ಬದಲಾಯಿಸುವ ವೇಳೆ ಸಂಭವಿಸಿದ ಭೀಕರ ಅನಿಲ ಸ್ಫೋಟಕ್ಕೆ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಸುಂದರೇಶ್ ಎಂಬುವವರ ಮನೆಯಲ್ಲಿ ಅಡುಗೆ ಅನಿಲ ಖಾಲಿಯಾಗಿದ್ದರಿಂದ, ಹೊಸ ಸಿಲಿಂಡರ್ ಅಳವಡಿಸಲು ಮುಂದಾಗಿದ್ದಾರೆ. ಈ ವೇಳೆ ಗ್ಯಾಸ್ ತುಂಬಿದ್ದ ಸಿಲಿಂಡರ್ನ ರೆಗ್ಯುಲೇಟರ್ ಅಳವಡಿಸುವಾಗ ಅನಿಲ ಸೋರಿಕೆಯಾಗಿ ಏಕಾಏಕಿ ಸ್ಫೋಟಗೊಂಡಿದೆ. ಘಟನೆಯ ತೀವ್ರತೆಗೆ ಮನೆಯಲ್ಲಿದ್ದ ಮಹಿಳೆ, ಆಕೆಯ ಪುತ್ರ ಸೇರಿದಂತೆ ಒಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಫೋಟದ ಭೀಕರತೆಗೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಹಾಗೂ ಜೀವನೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ತಕ್ಷಣವೇ ಕೊಣನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



