ಹೊಸದಿಗಂತ ಡಿಜಿಟಲ್ ಡೆಸ್ಕ್:
ಏ.10 ರೊಳಗೆ ಬಸನಗೌಡ ಪಾಟೀಲ ಯತ್ನಾಳ್ ಅವರ ಉಚ್ಚಾಟನೆ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಏ.13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್ಗೆ ಎಚ್ಚರಿಕೆ ರವಾನಿಸಿದ್ದಾರೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿ ಶಿಸ್ತುಪಾಲನಾ ಸಮಿತಿ ಪಕ್ಷದಿಂದ ಉಚ್ಚಾಟಿಸಿರುವ ಕ್ರಮ ಖಂಡಿಸಿ ಬೆಳಗಾವಿಯ ಗಾಂಧಿ ಭವನದಲ್ಲಿ ಇಂದು ಪಂಚಮಸಾಲಿ ಮುಖಂಡರು ಸಭೆ ನಡೆಸಿದರು.
ಸಭೆ ಬಳಿಕ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಮೀಸಲಾತಿ ಹೋರಾಟದ ರಾಷ್ಟ್ರೀಯ ಅಧ್ಯಕ್ಷ, ಹಿಂದು ಫೈರ್ ಬ್ರ್ಯಾಂಡ್ ಯತ್ನಾಳರನ್ನು ಉಚ್ಚಾಟಿಸಿದ್ದಾರೆ. ಇದನ್ನು ಇಡೀ ಪಂಚಮಸಾಲಿ ಸಮುದಾಯ ಖಂಡಿಸುತ್ತದೆ ಎಂದು ಆರೋಪಿಸಿದರು.
ಲಿಂಗಾಯತ ಸಮುದಾಯ ಕಡೆಗಣಿಸಿ ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಎಸ್. ನಿಜಲಿಂಗಪ್ಪ, ವಿರೇಂದ್ರ ಪಾಟೀಲ ಅವರ ಕಾಲದಿಂದಲೂ ಇದು ನಡೆದುಕೊಂಡು ಬಂದಿದೆ. ಜನತಾದಳ ಇಬ್ಭಾಗ ಆದಾಗ ನಮ್ಮ ಸಮಾಜ ಯಡಿಯೂರಪ್ಪರ ಬೆನ್ನಿಗೆ ನಿಂತಿತ್ತು. ಈಗ ಯತ್ನಾಳ್ ಲಿಂಗಾಯತ ನಾಯಕರಾಗಿ ಹೊಮ್ಮುತ್ತಿದ್ದರು. ಇಂಥ ಸಂದರ್ಭದಲ್ಲಿ ಅವರನ್ನು ಉಚ್ಚಾಟಿಸಿದ್ದಾರೆ ಎಂದು ಸ್ವಾಮೀಜಿ ಕಿಡಿಕಾರಿದರು.