ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಸಚಿವ ಡಿ.ಸುಧಾಕರ್ ಭರವಸೆ

ಹೊಸದಿಗಂತ ವರದಿ, ಚಿತ್ರದುರ್ಗ:

ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ನನ್ನ ಮೇಲಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ಬೇರೆ ಭಾಗಗಳಿಂದ ಹೋಬಳಿಯ ಎಲ್ಲಾ ಗ್ರಾಮಗಳಿಗೂ ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದಾಗಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ ಹೇಳಿದರು.

ಜವನಗೊಂಡನಹಳ್ಳಿ ಗ್ರಾಮದ ನಾಡಕಚೇರಿ ಹತ್ತಿರದ ಗಣೇಶ ದೇವಸ್ಥಾನದ ಆವರಣದಲ್ಲಿ ಸೋಮವಾರ ಆಯೋಜಿಸಲಾದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜವನಗೊಂಡನಹಳ್ಳಿ ಹೋಬಳಿಯಲ್ಲಿ ಅಂತರ್ಜಲ ಮಟ್ಟ ತುಂಬಾ ಕುಸಿದಿದೆ. ಸಾವಿರ ಅಡಿ ಬೋರ‍್ವೆಲ್ ಕೊರೆದರೂ ನೀರು ಸಿಗದ ಪರಿಸ್ಥಿತಿಯಾಗಿದೆ. ಜವನಗೊಂಡನಹಳ್ಳಿಯಲ್ಲಿ ಈಗಾಗಲೇ ೯ ಬೋರ‍್ವೆಲ್ ಕೊರೆಯಲಾಗಿದ್ದು, ಅದರಲ್ಲಿ ೫ ಬೋರ‍್ವೆಲ್‌ನಲ್ಲಿ ನೀರು ಸಿಕ್ಕಿದೆ. ಮುಂದಿನ ದಿನಗಳಲ್ಲಿ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಟ್ಯಾಂಕರ್ ನೀಡುವ ಆಲೋಚನೆಯಿದೆ. ಅಲ್ಲಿಯವರೆಗೆ ಖಾಸಗಿ ಟ್ಯಾಂಕರ‍್ಗಳ ಮೂಲಕ ನೀರು ಸರಬರಾಜು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಈ ಭಾಗದ ಸಾಕಷ್ಟು ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಹಿರಿಯೂರು ತಾಲ್ಲೂಕಿನಾದ್ಯಂತ ರೂ.೧೦೦ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಭದ್ರಾ ಮೇಲ್ದಂಡೆ ಯೋಜನೆಯ ಪೈಪ್ ಲೈನ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಹ ಜನತಾ ದರ್ಶನ ಮಾಡುತ್ತಿದ್ದಾರೆ. ಸಚಿವರ ನೇತೃತ್ವದಲ್ಲಿ ಜರುಗುವ ಜನತಾ ದರ್ಶನದಲ್ಲಿ ಸ್ವೀಕರಿಸುವ ಅರ್ಜಿಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷೆ ತೋರದೆ, ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಮುಖ್ಯಮಂತ್ರಿ ಹಾಗೂ ಸಚಿವರನ್ನು ಅರಸಿ ಅರ್ಜಿ ಹಿಡಿದು ಅಲೆದಾಡುವುದನ್ನು ತಪ್ಪಿಸಲು, ನಿರಂತರವಾಗಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮಗಳಲ್ಲಿ ಆಯೋಜಿಸಲಾಗಿದೆ. ತೀವ್ರ ತರನಾದ ಬರದ ಹಿನ್ನೆಯಲ್ಲಿ ಜಿಲ್ಲೆಯಾದ್ಯಂತ ಯುದ್ಧಸನ್ನದ್ದ ರೀತಿಯ ಕುಡಿಯುವ ನೀರಿನ ಸೌಲಭ್ಯ ಹಾಗೂ ಪರಿಹಾರದ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ತಹಶೀಲ್ದಾರ್ ರಾಜೇಶ್ ಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿ, ಕವಿ ಡಿ.ವಿ.ಗುಂಡಪ್ಪ ಸರ್ಕಾರವನ್ನು, ’ಸರ್ವ ಕಾರ್ಯ ಮಾಡುವ ಶಕ್ತಿ ಇರುವಂತಹದ್ದು’ ಎಂದು ಬಣ್ಣಿಸಿದ್ದಾರೆ. ಸರ್ವ ಎಂದರೆ ಎಲ್ಲರ ಕಾರ್ಯ ಎಂದೂ ಅರ್ಥವಿದೆ. ತಾಲ್ಲೂಕಿನಲ್ಲಿ ಇದುವರೆಗೆ ೬೪೩ ಅರ್ಜಿಗಳು ಜನತಾ ದರ್ಶನದಲ್ಲಿ ಸಲ್ಲಿಕೆಯಾಗಿವೆ. ಇದರೊಂದಿಗೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತವಾದ ೩೬ ಅರ್ಜಿಗಳಿಗೂ ಸಹ ಪರಿಹಾರ ಒದಗಿಸಲಾಗಿದೆ ಎಂದರು.

ಜವನಗೊಂಡನಹಳ್ಳಿ ಗ್ರಾ.ಪಂ ಅಧ್ಯಕ್ಷ ಅಲ್ತಾಫ್ ಮಾತನಾಡಿ, ಅಹವಾಲುಗಳನ್ನು ಸಲ್ಲಿಸಲು ಹೋಬಳಿ, ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಕ್ಕೆ ಹೋಗುವ ಪರಿಸ್ಥಿತಿ ತಪ್ಪಿಸಲು, ಗ್ರಾಮದಲ್ಲಿಯೇ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ತಂದಿದೆ. ಜವನಗೊಂಡನಹಳ್ಳಿ ಗ್ರಾಮ ರಂಗನಾಥಪುರ ಬೆಸ್ಕಾಂ ವಿದ್ಯತ್ ವಿತರಣಾ ಕೇಂದ್ರಕ್ಕೆ ಸೇರಿದೆ. ಇದರಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ಅನಿಮಿಯತ ವ್ಯತ್ಯಯ ಉಂಟಾಗುತ್ತಿದೆ. ಇದರ ಬದಲು ಗ್ರಾಮದಲ್ಲಿ ವಿದ್ಯುತ್ ವಿತರಣಾ ಶಾಖಾ ಕಚೇರಿ ನಿರ್ಮಿಸಬೇಕು. ಗ್ರಾಮದ ಗುಡ್ಡದಲ್ಲಿನ ಕುಡಿಯುವ ನೀರು ಸರಬರಾಜು ಕೇಂದ್ರಕ್ಕೆ ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ನೀಡಬೇಕು. ಗ್ರಾಮದ ಚರಂಡಿ ಹಾಗೂ ರಸ್ತೆಗಳ ಕಾಮಗಾರಿಗೆ ಅನುದಾನ ಒದಗಿಸಬೇಕು. ಇದರೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣದ ಹಲವು ಕಾಮಗಾರಿಗಳು ಸಹ ಈಡೇರುವುದು ಬಾಕಿ ಇದೆ. ಇವುಗಳಿಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಕರಿಯಾಲ ಗ್ರಾ.ಪಂ ಉಪಾಧ್ಯಕ್ಷ ರಾಮಣ್ಣ ಮಾತನಾಡಿ, ಕರಿಯಾಲ ಗ್ರಾಮದಲ್ಲಿ ಒಂದು ಸಾವಿರ ಅಡಿ ಕೊರೆದರೂ ನೀರು ಸಿಗುತ್ತಿಲ್ಲ. ಟ್ಯಾಂಕರ್ ಇದ್ದರೂ ಗೋಶಾಲೆಗಳಿಗೆ ನೀರು ನೀಡಲು ಆಗುತ್ತಿಲ್ಲ. ಸಮಸ್ಯೆ ಪರಿಹಾರಕ್ಕಾಗಿ ಹೋಬಳಿಯ ಗಾಯಿತ್ರಿ ಜಲಾಶಯಕ್ಕೆ ಯಾವುದಾದರೂ ಮೂಲದಿಂದ ನೀರು ತುಂಬಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಪಿ.ಯು.ಸಿಯಲ್ಲಿ ಉತ್ತೀರ್ಣರಾದ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆ ಪಂಚಾಮಿತ್ರ ವಾಟ್ಸ್‌ಪ್ ನಂಬರ್ ಬಿಡುಗಡೆಗೊಳಿಸಲಾಯಿತು. ಕಾಡುಗೊಲ್ಲ ಜಾತಿ ಪ್ರಮಾಣಪತ್ರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದ್ರ ಕುಮಾರ್ ಮೀನಾ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜವನಗೊಂಡನಹಳ್ಳಿ ಗ್ರಾ.ಪಂ ಉಪಾಧ್ಯಕ್ಷೆ ಸುಮಯ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ತಿಮ್ಮಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮದ ಪರ್ವಿನ್ ತಾಜ್ ಪ್ರಾರ್ಥನೆ ನೆರವೇರಿಸಿದರು. ತಾಲ್ಲೂಕು ಪಂಚಾಯಿತಿ ಇಓ ಸತೀಶ್ ಸ್ವಾಗತಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!