ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆ ಒಂದೇ ಪರಿಹಾರವಾಗಿದ್ದು ಈ ಬಗ್ಗೆ ನಾವು ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಆಣೆಕಟ್ಟು ನಿರ್ಮಾಣವಾಗಿದ್ದರೆ ಇಂದು ಈ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಕಳೆದ ವರ್ಷ 400ಕ್ಕೂ ಹೆಚ್ಚು TMC ನೀರು ವ್ಯರ್ಥವಾಗಿ ಸಮುದ್ರದ ಪಾಲಾಗಿದೆ. ಅದರಲ್ಲಿ ಸ್ವಲ್ಪ ಪ್ರಮಾಣದ ನೀರನ್ನು ಮೇಕೆದಾಟು ಆಣೆಕಟ್ಟು ಮೂಲಕ ಹಿಡಿದಿಟ್ಟಿದ್ದರೆ ಸಮಸ್ಯೆ ಬರುತ್ತಿರಲಿಲ್ಲ ಎಂದಿದ್ದಾರೆ.
ಮೇಕೆದಾಟು ಆಣೆಕಟ್ಟು ನೀರನ್ನು ನಾವು ನೀರಾವರಿಗೆ ಬಳಸಲು ಸಾಧ್ಯವಿಲ್ಲ. ಕೇವಲ ಕುಡಿಯುವ ನೀರಿಗೆ ಬಳಸಬಹುದು. ಮೇಕೆದಾಟು ಇಂತಹ ಸಂಕಷ್ಟದ ಸಮಯದಲ್ಲಿ ಹೆಚ್ಚು ಸಹಾಯಕ್ಕೆ ಬರುತ್ತದೆ.ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಬೇಕಿದೆ. ನಾವು ನಮ್ಮ ಅರ್ಜಿಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದೇವೆ. ನಾವು ಈ ವಿಚಾರವನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.
ನಮ್ಮ ರಾಜ್ಯದಲ್ಲಿ ಕೆಲವು ವಿರೋಧ ಇದ್ದರೂ ನಾವು ನ್ಯಾಯಾಲಯದ ಆದೇಶ ಗೌರವಿಸುತ್ತೇವೆ. ನಮ್ಮ ಸರ್ಕಾರ ನ್ಯಾಯಾಲಯಕ್ಕೆ ಎಲ್ಲಾ ಮಾಹಿತಿ ನೀಡಿದ್ದು, ನಮ್ಮ ರಾಜ್ಯದ ರೈತರ ಹಿತ ಕಾಯಲು ಬದ್ಧವಿದ್ದೇವೆ. ಇಂದು ಸುಪ್ರೀಂ ಕೋರ್ಟ್ ನೀರು ಬಿಡುಗಡೆ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಸಮಸ್ಯೆಗೆ ಪರಿಹಾರ ಬೇಕಾದರೆ ಅದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದು ಸುಪ್ರೀಂ ಕೋರ್ಟ್ ಹಾಗೂ ತಮಿಳುನಾಡಿಗೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.