ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಿಚಾಂಗ್ ಚಂಡಮಾರುತದಿಂದ ಉಂಟಾದ ಮಳೆ ಮತ್ತು ಪ್ರವಾಹದಿಂದ ಸಂತ್ರಸ್ತರಾದ ಕುಟುಂಬಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಲಾ ರೂ. 6,000 ನಗದು ಪ್ರವಾಹ ಪರಿಹಾರ ಬಿಡುಗಡೆ ಮಾಡಿದರು.
ಪ್ರವಾಹದಿಂದ ಅತಿಹೆಚ್ಚು ಹಾನಿಗೊಳಗಾದ ವೆಲಚೇರಿಯಲ್ಲಿ ಸಂತ್ರಸ್ತ ಕುಟುಂಬದ ಮಹಿಳೆಗೆ ಭಾನುವಾರ ನಗದು ನೀಡುವ ಮೂಲಕ ಸಿಎಂ ಸ್ಟಾಲಿನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜ್ಯದ ಸಚಿವರು, ಚುನಾಯಿತ ಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
ರಾಜ್ಯ ಸರ್ಕಾರ ನಗದು ನೆರವು ನೀಡಲು ₹1,486 ಕೋಟಿಗಳನ್ನು ಮಂಜೂರು ಮಾಡಿದ್ದು, ಚೆನ್ನೈ, ತಿರುವಳ್ಳೂರು, ಚೆಂಗಲ್ಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿರುವ ಸುಮಾರು 25 ಲಕ್ಷ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ.
ನಗದು ಪರಿಹಾರವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಂಗಡಿಗಳಲ್ಲಿ ವಿತರಿಸಲಾಗುತ್ತದೆ.
ಮಿಚಾಂಗ್ ಚಂಡಮಾರುತದಿಂದ ಡಿಸೆಂಬರ್ 3 ಮತ್ತು 4 ರಂದು ಚೆನ್ನೈ ಮತ್ತು ಸಮೀಪದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಪ್ರವಾಹದಿಂದ ಸಂತ್ರಸ್ತರಾದ ಜನರಿಗೆ ನಗದು ಸಹಾಯ ನೀಡುವುದಾಗಿ ಸಿಎಂ ಸ್ಟಾಲಿನ್ ಘೋಷಿಸಿದ್ದರು.