ಹಂಪಿಯಲ್ಲಿ ಸಂಭ್ರಮದ ಕೋಟಿ ಕಂಠ ಗಾಯನ

ಹೊಸದಿಗಂತ ವರದಿ,ವಿಜಯನಗರ:

ವಿಶ್ವಪಾರಂಪರಿಕ ತಾಣ ಹಂಪಿಯ ಎದುರು ಬಸವಣ್ಣ ಮಂಟಪದ ಎದುರು ಶುಕ್ರವಾರ ನಡೆದ ಕೋಟಿ ಕಂಠ ಗಾಯನವು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.ವಿಜಯನಗರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ 67ನೇ ಕನ್ನಡರಾಜ್ಯೋತ್ಸವ ನಿಮಿತ್ತ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಕಲಾವಿದರಿಂದ ಮತ್ತು ಶಾಲಾ ಮಕ್ಕಳಿಂದ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ”, ಹುಯಿಲಗೋಳ ನಾರಾಯಣ್‍ರಾವ್ ಅವರ “ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು”, ಚೆನ್ನವೀರಕಣವಿ ಅವರ “ವಿಶ್ವ ವಿನೂತನ ವಿದ್ಯಾಚೇತನ ಸರ್ವ ಹೃದಯ ಸಂಸ್ಕಾರಿ”, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ”, ಡಾ.ಡಿ ಎಸ್ ಕರ್ಕಿ ಅವರ “ಹಚ್ಚೇವು ಕನ್ನಡ ದೀಪ” ಹಾಗೂ ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ಆರು ಗೀತೆಗಳನ್ನು ಹಾಡಲಾಯಿತು.
ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ವಯೋಮಾನದವರು ಅತ್ಯಂತ ಉತ್ಸಾಹದಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಸಂಕಲ್ಪ ವಿಧಿಯನ್ನು ಬೋಧಿಸಿದರು. ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಈ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಪಿ.ಶ್ರವಣ್, ಎಸ್ಪಿ ಡಾ.ಕೆ.ಅರುಣ್, ಅಪರ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ್, ಡಿ.ವೈ.ಎಸ್ಪಿ ವಿಶ್ವನಾಥ ಕುಲಕರ್ಣಿ, ಹಂಪಿ ಗ್ರಾ.ಪಂ. ಅಧ್ಯಕ್ಷೆ ಹಂಪಮ್ಮ, ಹೊಸಪೇಟೆ ತಹಶಿಲ್ದಾರ್ ವಿಶ್ವಜಿತ್ ಮೆಹತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಹೊಸಪೇಟೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಪ್ರತಿನಿಧಿಗಳು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!