ಹೊಸದಿಗಂತ ವರದಿ, ಮದ್ದೂರು :
ಕೆರೆಗಳ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಗುರುವಾರ ಹೇಳಿದರು.
ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಟಿ. ನರಸೀಪುರಕ್ಕೆ ತೆರಳುವ ಮಾರ್ಗ ಮಧ್ಯೆ ಪ್ರವಾಸಿ ಮಂದಿರ ವೃತ್ತದಲ್ಲಿ ಮನ್ಮುಲ್ ನಿರ್ದೇಶಕ ಎಸ್.ಪಿ. ಸ್ವಾಮಿ ಮತ್ತು ಬಿಜೆಪಿ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಸುದ್ಧಿಗಾರರೊಂದಿಗೆ ಮಾತನಾಡಿದರು.
ಕೆರೆಗಳು ರೈತರ ಜೀವನಾಡಿಯಾಗಿವೆ. ಇಂತಹ ಕೆರೆಗಳನ್ನು ಕೆಲವು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.
ರಾಜ್ಯದ ಕೆರೆಗಳ ಒತ್ತುವರಿ ಬಗ್ಗೆ ನ್ಯಾಯಾಲಯ ಈಗಾಗಲೇ ಮಾಹಿತಿ ಒದಗಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಕೆರೆಗಳ ಒತ್ತುವರಿ ಕುರಿತಂತೆ ಕಂದಾಯ ಮತ್ತು ನೀರಾವರಿ ಇಲಾಖೆಗಳ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕೆರೆಗಳ ಒತ್ತುವರಿ ಬಗ್ಗೆ ಸಂಪೂರ್ಣ ಮಾಹಿತಿ ಬಂದ ನಂತರ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.