ಹೊಸದಿಗಂತ ವರದಿ, ಮಂಗಳೂರು:
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಮಂಗಳವಾರ ವೀಕ್ಷಿಸಿದ ಬಳಿಕ ಅವರು ಸುದ್ದಿಗೋಷ್ಠಿ ಕಾಮಗಾರಿಗಳ ಕುರಿತಂತೆ ವಿವರ ನೀಡಿದರು.
ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಕೇಂದ್ರ ಮೇ ತಿಂಗಳ ಒಳಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದ್ದರೂ ನಾವು ಆದಷ್ಟು ಶೀಘ್ರ ಮುಗಿಸಲು ಒತ್ತು ನೀಡಿದ್ದೇವೆ. ಮಾರ್ಚ್ ಅಂತ್ಯದ ಗಡುವು ನೀಡಲಾಗಿದೆ. ಅಲ್ಲದೆ ಮಂಗಳೂರಿನ ಅಭಿವೃದ್ಧಿಗೆ ಇನ್ನೂ ನೂರು ಕೋಟಿ ಅನುದಾನದ ಅಗತ್ಯವಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿದೆ ಎಂದು ಸಚಿವರು ಹೇಳಿದರು.
ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಳಪೆ ಕಾಮಗಾರಿಯ ದೂರುಗಳು ಕೇಳಿ ಬಂದಲ್ಲಿ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಳಾ ರಾವ್, ಮೂಡಾ ಅಧ್ಯಕ್ಷ ರವಿಶಂಕರ ಮಿಜಾರು ಉಪಸ್ಥಿತರಿದ್ದರು.