ಹೊಸದಿಗಂತ ವರದಿ, ಬೀದರ್
ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಒದ್ದಾಡುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ಕೊಡಿಸಲು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ ಅವರು ಶುಕ್ರವಾರ ನೆರವಾಗಿದ್ದಾರೆ.
ಸಚಿವರು ಸ್ವ ಗ್ರಾಮದಿಂದ ಯಾದಗಿರಿ ಜಿಲ್ಲೆಗೆ ರಸ್ತೆ ಮೂಲಕ ತೆರಳುತ್ತಿದ್ದ ವೇಳೆ ಕಮಲನಗರ ತಾಲ್ಲೂಕಿನ ಸಂಗಮ ಸೇತುವೆ ಬಳಿ ವಾಹನ ಅಪಘಾತಕ್ಕೀಡಾಗಿ ಗಾಯಾಳುಗಳು ನರಳುತ್ತಿರುವುದನ್ನು ನೋಡಿದ ಸಚಿವರು ತಮ್ಮ ವಾಹನವನ್ನು ನಿಲ್ಲಿಸಿ, ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ.
ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಬೀದರ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅಪಘಾತಕ್ಕೆ ಒಳಗಾದ ಇಬ್ಬರು ವಾಹನ ಸವಾರರು ಹಾಲಹಳ್ಳಿ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಆತಂಕಕ್ಕೆ ಒಳಗಾಗುವುದು ಬೇಡ, ಶೀಘ್ರ ಗುಣಮುಖರಾಗಿ ಬನ್ನಿ. ಯಾವುದೇ ರೀತಿಯ ಸಮಸ್ಯೆ ಎದುರಾದಲ್ಲಿ ತಮ್ಮನ್ನು ಸಂಪರ್ಕಿಸಿ ಎಂದು ಗಾಯಾಳುಗಳಿಗೆ ಸಚಿವರು ಧೈರ್ಯ ತುಂಬಿದರು.
ಇದೇ ವೇಳೆ ಸಂಬಂಧಿಸಿದ ವೈದ್ಯಾಧಿಕಾರಿಗಳನ್ನು ದೂರವಾಣಿ ಮುಖಾಂತರ ಸಂಪರ್ಕಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ