ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಜಾರಿಗಾಗಿ ಸರಕಾರ ಅಕ್ಕಿ ಹೊಂದಿಸಲು ಕಸರತ್ತು ನಡೆಸುತ್ತಿದ್ದು, ಇದರ ಭಾಗವಾಗಿ ಸಚಿವ ಕೆಎಚ್ ಮುನಿಯಪ್ಪ(HK Muniyappa) ಇಂದು (ಜೂನ್ 23) ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್(Piyush Goyal) ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು.
ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದ್ರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿಸದರು.
ನಾವು ಜನರಿಗೆ ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ ಎಂದು ಹೇಳಿದರು.