ಹೊಸದಿಗಂತ ವರದಿ ಬಳ್ಳಾರಿ:
ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ಆವರಣದ ಬಾಸ್ಕೆಟ್ ಬಾಲ್ ಮೈದಾನದ ಬಳಿ, ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಸುಮಾರು 9.50 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಮಾದರಿಯ ಕ್ರೀಡಾ ಸಮುಚ್ಚಯ, ಜಿಮ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಸೋಮವಾರ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ನಿರ್ಮಿಸಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ‘ಯುವಕರು, ಹಿರಿಯರು ಮತ್ತು ಮಹಿಳೆಯರಿಗೆ ವ್ಯಾಯಾಮ ಮಾಡಲು ಜಿಲ್ಲೆಯಲ್ಲಿ ಅತ್ಯಾಧುನಿಕ ಮಾದರಿಯ ವ್ಯಾಯಾಮ (ಜಿಮ್) ಕಟ್ಟಡ ನಿರ್ಮಾಣ ಮಾಡಲಾಗುವುದು. ಆಧುನಿಕ ಉಪಕರಣಗಳು ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಒಳಗೊಂಡಿರಲಿದೆ. ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿದರು. ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತ, ಉಪಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿ.ಪo. ಸಿಇಒ ರಾಹುಲ್ ಶರಣಪ್ಪ ಸಂಕನೂರ, ತಹಶೀಲ್ದಾರ ಗುರುರಾಜ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಸೇರಿದಂತೆ ವಿವಿಧ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಇತರರು ಉಪಸ್ಥಿತರಿದ್ದರು.