ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಬರೆಯಲು ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ವಿದ್ಯಾರ್ಥಿಗಳ ನೆರವಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಧಾವಿಸಿದ್ದಾರೆ. ದೂರದ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದು ಪರೀಕ್ಷಾ ಕೇಂದ್ರಗಳನ್ನು ಹುಡುಕಲು ತಡಕಾಡುತ್ತಿದ್ದ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಸಚಿವರು ವಿಶೇಷ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದಾರೆ.
ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ!
ಸಾರಿಗೆ ದಟ್ಟಣೆಯಲ್ಲಿ ಸಿಲುಕಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪುವುದು ವಿಳಂಬವಾಗಬಾರದು ಎಂಬ ದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ನೀಟ್ ಪ್ರವೇಶ ಪತ್ರವನ್ನು ತೋರಿಸಿ ನಗರದ ಬಿಎಂಟಿಸಿ ಮತ್ತು ನಿಯೋಜಿತ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಸುಲಭವಾಗಿ ಪತ್ತೆಹಚ್ಚಲು ಮತ್ತು ಬಸ್ ಸೌಕರ್ಯಗಳ ಮಾಹಿತಿ ಪಡೆಯಲು ಸಚಿವರ ಕಚೇರಿಯಿಂದ ವಿಶೇಷ ಸಹಾಯವಾಣಿಯನ್ನು ಸಹ ಆರಂಭಿಸಲಾಗಿದೆ.
ಇದನ್ನೂ ಓದಿ:
‘ಯಾರದೇ ಪರೀಕ್ಷೆ ತಪ್ಪಬಾರದು ಎಂಬುದು ನಮ್ಮ ಆಶಯ’
ಈ ಜನಪರ ವ್ಯವಸ್ಥೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ದೂರದ ಊರುಗಳಿಂದ, ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಭವಿಷ್ಯದ ಕನಸು ಹೊತ್ತು ಬೆಂಗಳೂರಿಗೆ ಬಂದಿದ್ದಾರೆ. ಕೇವಲ ಸಾರಿಗೆ ಸಮಸ್ಯೆ ಅಥವಾ ದಾರಿಯ ಅರಿವಿಲ್ಲದ ಕಾರಣಕ್ಕಾಗಿ ಯಾವುದೇ ಒಬ್ಬ ವಿದ್ಯಾರ್ಥಿಯ ಪರೀಕ್ಷೆಯೂ ತಪ್ಪಬಾರದು. ಹೀಗಾಗಿ ಈ ತುರ್ತು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.



