ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ಬಹುಮತ ಪಡೆದು ಸರ್ಕಾರ ರಚಿಸಿದೆ.
ಇತ್ತ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶೀಘ್ರದಲ್ಲೇ ಪತನವಾಗಲಿದೆ. ಈ ಕುರಿತು ಕಾದು ನೋಡೋಣ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ.
ದೇಶದ ಜನರು ಬಹುಮತದ ಸರ್ಕಾರವನ್ನು ಆಯ್ಕೆ ಮಾಡಿಲ್ಲ. ಅಲ್ಪಮತದ ಸರ್ಕಾರವು ದೇಶದಲ್ಲಿದೆ. ಆಕಸ್ಮಿಕವಾಗಿ ಬಿಜೆಪಿ ಮೈತ್ರಿಕೂಟವು ಸರ್ಕಾರ ರಚಿಸಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಎನ್ಡಿಎ ಮೈತ್ರಿಕೂಟದ ಸರ್ಕಾರವು ಪತನವಾಗಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬಿಜೆಪಿಯು 240 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಟಿಡಿಪಿ, ಜೆಡಿಯು, ಎಲ್ಜೆಪಿ ಹಾಗೂ ಏಕನಾಥ್ ಶಿಂಧೆ ಬಣದ ಶಿವಸೇನೆಯ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಿದೆ.
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಜೆಡಿಯು ನಾಯಕ ಕೆ.ಸಿ. ತ್ಯಾಗಿ ತಿರುಗೇಟು ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಹುರುಳಿಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಖರ್ಗೆ ಅವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂಬುದಾಗಿ ಕೆ.ಸಿ.ತ್ಯಾಗಿ ಹೇಳಿದ್ದಾರೆ. ನಾವು ಯಾವುದೇ ಕಾರಣಕ್ಕೂ ಎನ್ಡಿಎ ಮೈತ್ರಿಕೂಟವನ್ನು ತೊರೆಯುವುದಿಲ್ಲಎಂಬುದಾಗಿ ನಿತೀಶ್ ಕುಮಾರ್ ಅವರು ಇದಕ್ಕೂ ಮೊದಲು ಹೇಳಿದ್ದರು. ಚಂದ್ರಬಾಬು ನಾಯ್ಡು ಅವರ ಟಿಡಿಪಿಯು ಕೂಡ ಬಿಜೆಪಿ ಜತೆ ಅಚಲವಾಗಿ ನಿಂತಿದೆ.