ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದಾರೆ.
ಈ ವೇಳೆ ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಪ್ರಧಾನಮಂತ್ರಿ ಆವಾಸ್ ಯೋಜನೆ (Pradhan Mantri Awas Yojana-PMAY) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, ಸಂಪುಟ ದರ್ಜೆ ಸಚಿವರು, ಸ್ವತಂತ್ರ ಖಾತೆ ನಿರ್ವಹಣೆ ಹಾಗೂ ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು.
ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು.
ಏನಿದು ಯೋಜನೆ? ಹೇಗೆ ಅನುಕೂಲ?
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂ. ನೀಡಲಾಗುತ್ತದೆ. ಇನ್ನು ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.30 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ.