ಹೊಸದಿಗಂತ ವರದಿ ಕೊಪ್ಪಳ:
ಪ್ರಧಾನಿ ನರೇಂದ್ರ ಮೋದಿ ಕಲಿಯುಗದ ಶ್ರೀಕೃಷ್ಣನ ಅವತಾರ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. ಮುನಿರಾಬಾದ್ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಭಾರತದಲ್ಲಿ ಶ್ರೀಕೃಷ್ಣನಂತೆ ಭಾರತದ ಅಭಿವೃದ್ಧಿಯಲ್ಲಿ ಮೋದಿ ಪಾತ್ರ ಇದೆ. ನವ ಭಾರತದ ನಿರ್ಮಾಣಕ್ಕೆ ಮೋದಿ ಶ್ರಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಧುನಿಕ ಶ್ರೀಕೃಷ್ಣ ಎಂದು ಹರ್ಷ ವ್ಯಕ್ತಪಡಿಸಿದರು.
ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ 1.29 ಲಕ್ಷ ಕೋಟಿ ಅನುದಾನ ನೀಡಿದೆ. ಮೋದಿಯವರ ಜನಪ್ರಿಯತೆ ಸಹಿಸದ ಕೆಲವರು ಏನೇನೋ ಮಾತನಾಡುತ್ತಿದ್ದಾರೆ. ಮೊದಲು ರಾಜ್ಯಕ್ಕೆ ಬರಲಿ ಎನ್ನುತ್ತಾರೆ. ಬಂದ ನಂತರ ರಾಜ್ಯಕ್ಕೆ ಕೊಡುಗೆ ಏನು ಎಂದು ಪ್ರಶ್ನಿಸುತ್ತಾರೆ. ಯುಪಿಎ ಸರ್ಕಾರ ಇದ್ದಾಗ ಪ್ರಧಾನಿಗಳು ಎಷ್ಟು ಬಾರಿ ರಾಜಕ್ಕೆ ಬಂದು ಹೋಗಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ಧ ಸರಣಿ ಟ್ವೀಟ್ ಮಾಡುತ್ತಿದ್ದು, ಮೂರ್ಖರಂತೆ ಮಾತನಾಡುತ್ತಿದ್ದಾರೆ. ಮೋದಿ ವಿರುದ್ಧ ಟ್ವೀಟ್ ಮಾಡುವವರಿಗೆ ಜನ ಉತ್ತರ ಕೊಡುತ್ತಾರೆ. ಕಾಂಗ್ರೆಸ್ ನಾಯಕರು ಹತಾಶರಾಗಿ ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.