ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕುರಿತು ಉದ್ಯಮಿ ಮೋಹನ್ದಾಸ್ ಪೈ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯನ್ನು ನೇರವಾಗಿ ಟೀಕಿಸಿರುವ ಅವರು, ರಾಜ್ಯದಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆ ಒದಗಿಸುವಲ್ಲಿ ಸಚಿವರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮೋಹನ್ದಾಸ್ ಪೈ, ಕಳೆದ ಮೂರು ವರ್ಷಗಳಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹದಗೆಟ್ಟಿದೆ ಎಂದಿದ್ದಾರೆ. ಬಸ್ಸುಗಳ ಸಂಖ್ಯೆ ಕಡಿಮೆಯಾಗಿದ್ದು, ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ ಎಂದ ಅವರು, ಸಾರಿಗೆ ಕ್ಷೇತ್ರದಲ್ಲಿ ಖಾಸಗಿ ವಲಯಕ್ಕೆ ಅವಕಾಶ ನೀಡಬೇಕೆಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿ:
ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ಗಳ ಮೂಲಕ ಟೀಕೆ ಮಾಡುವ ಬದಲು ನೇರ ಚರ್ಚೆಗೆ ಬನ್ನಿ ಎಂದು ಸವಾಲು ಎಸೆದಿದ್ದಾರೆ. ಯಾವುದೇ ವೇದಿಕೆಯಲ್ಲಿ ಮುಖಾಮುಖಿ ಚರ್ಚೆಗೆ ಸಿದ್ಧವಿದ್ದೇನೆ ಎಂದ ಅವರು, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರೇ ವಾಸ್ತವಾಂಶಗಳನ್ನು ವಿವರಿಸಲು ಸಾಕು ಎಂದು ಹೇಳಿದ್ದಾರೆ.
ಇನ್ನೂ, ಮೋಹನ್ದಾಸ್ ಪೈ ಅವರ ದೃಷ್ಟಿಕೋನವನ್ನು ಕೇವಲ ಲಾಭ–ನಷ್ಟದ ಲೆಕ್ಕಾಚಾರಕ್ಕೆ ಸೀಮಿತವೆಂದು ಟೀಕಿಸಿದ ರಾಮಲಿಂಗಾ ರೆಡ್ಡಿ, ಸಾರ್ವಜನಿಕ ಸಾರಿಗೆ ಸೇವೆ ಸಾಮಾಜಿಕ ಹೊಣೆಗಾರಿಕೆ ಎಂದರು.



