ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಸಹಿತ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ. ಈ ಬೆಳವಣಿಗೆ ಮುಂಗಾರು ಮತ್ತೆ ಚುರುಕುಗೊಂಡಂತೆ ಗೋಚರಿಸಿದರೂ, ಈಗಿನ ಲೆಕ್ಕಾಚಾರದಂತೆ ಮುಂದಿನ ಒಂದೆರಡು ದಿನಗಳಲ್ಲಿ ಮಳೆ ತೀವ್ರತೆ ಕಳೆದುಕೊಳ್ಳಲಿದೆ. ಮಾರುತಗಳು ದುರ್ಬಲತೆಯನ್ನೇ ಕಾಯ್ದುಕೊಂಡಿವೆ.
ಜೂ.7ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಬಿಜಾಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಕಾಸರಗೋಡು ಸಹಿತ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಇನ್ನು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಸಂಜೆ ವೇಳೆ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ನಿರೀಕ್ಷಿಸಲಾಗಿದೆ.