ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಿಂದ ಆಗಸ್ಟ್ 13 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ತಿಳಿಸಿದ್ದಾರೆ. ಈ ಬಾರಿ ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ರಾಜಕೀಯ ಜಟಾಪಟಿ ಹಾಗೂ ಬಿರುಗಾಳಿ ಎದ್ದೇಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
ಈ ಸಂಧರ್ಭದಲ್ಲಿ ಕೇಂದ್ರ ಸರ್ಕಾರವು ಹಲವು ಪ್ರಮುಖ ಮಸೂದೆಗಳನ್ನು ಮಂಡಿಸುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯವಾಗಿ 130ನೇ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದೆ. ಈ ಮಸೂದೆಯ ಪ್ರಕಾರ, ಪ್ರಧಾನಿ, ಮುಖ್ಯಮಂತ್ರಿ ಅಥವಾ ಸಚಿವರು ಜೈಲು ಪಾಲಾದ 30 ದಿನಗಳ ಒಳಗಾಗಿ ಜಾಮೀನು ಪಡೆಯಲು ವಿಫಲರಾದರೆ, ಅವರನ್ನು ಹುದ್ದೆಯಿಂದ ವಜಾಗೊಳಿಸುವ ಅವಕಾಶವಿದೆ.
ಪ್ರತಿಪಕ್ಷಗಳಿಂದ ತರಾಟೆ
ಅಧಿವೇಶನದ ಅವಧಿಯಲ್ಲಿ ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಹಲವು ಪ್ರಮುಖ ವಿಷಯಗಳನ್ನು ಕೈಗೆತ್ತಿಕೊಳ್ಳಲಿವೆ. ಪ್ರಮುಖವಾಗಿ ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಕಳ್ಳತನದ ಹಗರಣದ ವಿಷಯವನ್ನು ಪ್ರತಿಪಕ್ಷಗಳು ಪ್ರಮುಖವಾಗಿ ಪ್ರಸ್ತಾಪಿಸಲಿವೆ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ನಡಾವಳಿಗಳನ್ನು ಕೈಗೊಳ್ಳುವ ವಿಷಯವೂ ಅಧಿವೇಶನದಲ್ಲಿ ಸದ್ದು ಮಾಡಲಿದೆ.
ಇದನ್ನೂ ಓದಿ:
ಸರ್ಕಾರದ ಪ್ರಮುಖ ಮಸೂದೆಗಳ ಮಂಡನೆ
ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರಲು ಸರ್ಕಾರ ಮತ್ತೊಮ್ಮೆ ಪ್ರಯತ್ನಿಸಲಿದೆ ಮತ್ತು ತೀವ್ರ ವಿವಾದಕ್ಕೆ ಕಾರಣವಾಗಿರುವ ಕ್ಷೇತ್ರ ಮರುವಿಂಗಡಣೆ (ಡೆಲಿಮಿಟೇಶನ್) ಮಸೂದೆಯನ್ನು ಸಹ ಸರ್ಕಾರ ಮಂಡಿಸುವ ನಿರೀಕ್ಷೆಯಿದೆ.



