ಹೊಸದಿಗಂತ ವರದಿ,ಕುಶಾಲನಗರ:
ವಿವಿಧ ಅನುದಾನವನ್ನು ಬಳಕೆ ಮಾಡಿಕೊಂಡು ಈಗಾಗಲೇ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಪಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನವನ್ನು ಗ್ರಾಮೀಣ ಪ್ರದೇಶದ ಉಪ ರಸ್ತೆಗಳ ಅಭಿವೃದ್ಧಿಗೆ ಒದಗಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.
ಕೂಡಿಗೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಡಿಕೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರದ ವಿವಿಧ ಇಲಾಖೆಗಳ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಬೇಕಾಗುವ ಎಲ್ಲಾ ಯೋಜನೆಗಳನ್ನು ಕೈಗೊಳ್ಳಲಾಗಿದೆ, ಅದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸತಿ ರಹಿತರಿಗೆ ವಸತಿ ನೀಡುವ ಉದ್ದೇಶದಿಂದ ಪೈಸಾರಿ ಜಾಗವನ್ನು ಗುರುತಿಸಿ ವಸತಿ ಯೋಜನೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಶಕ್ತಿ ಕೇಂದ್ರದ ಅಧ್ಯಕ್ಷ ಕೆ. ಟಿ. ಗಿರೀಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ ಬಿ.ಬಿ. ಭಾರತೀಶ್, ಸಂಚಾಲಕ ಮಹೇಶ್ ತಿಮ್ಮಯ್ಯ, ವಿಸ್ತಾರಕ ವಿಕ್ರಮ್, ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೇಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಮಂಜುಳಾ, ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷ ಉಮಾ ಶಂಕರ್, ಪಟ್ಟಣ ಪಂಚಾಯತಿ ಸದಸ್ಯ ಮನು, ತಾಲೂಕು ಮಂಡಲ ಕಾರ್ಯದರ್ಶಿ ಕಿಟ್ಟಿ, ಮಂಡಲ ಪ್ರಮುಖ್ ರವಿ, ಕೂಡಿಗೆ ಗ್ರಾಮ ಪಂಚಾಯತಿ ಬಿ ಜೆ ಪಿ ಬೆಂಬಲಿತ ಸದಸ್ಯರು, ಕೂಡಿಗೆ, ಹುದುಗೂರು, ಸೀಗೆಹೊಸೂರು, ಮದಲಾಪುರ ಗ್ರಾಮಗಳ ನೂರಾರು ಬಿಜೆಪಿ ಕಾರ್ಯಕರ್ತರು, ವಿವಿಧ ಘಟಕದ ಬೂತ್ ಅಧ್ಯಕ್ಷರುಗಳು, ವಿವಿಧ ಸಮಿತಿಯ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.