February 26, 2026
Thursday, February 26, 2026
spot_img

ರಸ್ತೆ ಅಪಘಾತಕ್ಕೆ ಬಲಿಯಾದ ಮುಂಡಗೋಡ ಗ್ರಾಮ ಲೆಕ್ಕಾಧಿಕಾರಿ: ಇಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿ-ಮುಂಡಗೋಡ ರಸ್ತೆಯ ಗಡಿಭಾಗದಲ್ಲಿರುವ ತಡಸ ತಾಯವ್ವನ ದೇವಸ್ಥಾನದ ಸಮೀಪ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ, ಮುಂಡಗೋಡ ತಹಶೀಲ್ದಾರ್ ಕಚೇರಿಯ ಓರ್ವ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಕಾರಿನಲ್ಲಿದ್ದ ಇತರ ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ನಿನ್ನೆ ಸಂಜೆ ಹುಬ್ಬಳ್ಳಿಯಿಂದ ಮುಂಡಗೋಡ ಕಡೆಗೆ ಪ್ರಯಾಣಿಸುತ್ತಿದ್ದ ಮುಂಡಗೋಡ ತಹಶೀಲ್ದಾರ್ ಕಚೇರಿಯ ಗ್ರಾಮ ಲೆಕ್ಕಾಧಿಕಾರಿಗಳಾದ ಗೋಪಾಲ್ ಎಂ., ಗೋವಿಂದ್ ರಾಠೋಡ್ ಮತ್ತು ಮಂಜುನಾಥ್ ಅವರು ಪ್ರಯಾಣಿಸುತ್ತಿದ್ದ ಕಾರು, ತಾಯವ್ವನ ದೇವಸ್ಥಾನದ ಸಮೀಪವಿರುವ ಮಿನಿ ಬ್ರಿಡ್ಜ್‌ನ ನಿಯಂತ್ರಣ ತಪ್ಪಿ ಆಳವಾದ ಪ್ರಪಾತಕ್ಕೆ ಉರುಳಿದೆ.

ಈ ದುರಂತದಲ್ಲಿ ಕಾರಿನಲ್ಲಿದ್ದ ಗ್ರಾಮ ಲೆಕ್ಕಾಧಿಕಾರಿ ಗೋಪಾಲ ಎಂ. ಅವರು ತೀವ್ರ ಪೆಟ್ಟುಗಳಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಜೊತೆಗೆ, ಗೋವಿಂದ ರಾಠೋಡ್ ಮತ್ತು ಮಂಜುನಾಥ್ ಅವರು ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮ ಲೆಕ್ಕಾಧಿಕಾರಿಗಳ ಸಾವಿನ ಸುದ್ದಿ ತಿಳಿದು ಮುಂಡಗೋಡ ತಹಶೀಲ್ದಾರ್ ಕಚೇರಿ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದಲ್ಲಿ ಶೋಕ ಮಡುಗಿದೆ. ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !