ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ನಗರದ ಹೊರವಲಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಅಂಗಡಿ ಮಾಲಕ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿದಿದ್ದು, ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಡಿ.25 ರ ಬೆಳಗ್ಗೆ 6 ಗಂಟೆಯಿಂದ ಡಿ.27 ರ ಬೆಳಗ್ಗೆ 6 ಗಂಟೆಯವರೆಗೆ ಅನ್ವಯವಾಗುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಈ ಆದೇಶ ಹೊರಡಿಸಿದ್ದಾರೆ.
ಕ್ರಿಸ್ ಮಸ್ ಆಚರಣೆ/ ತುರ್ತು ಸೇವೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧಾಜ್ಞೆ ಸಡಿಲಿಸಲಾಗಿದೆ.
ಸೆಕ್ಷನ್ ಜಾರಿ ಇರುವ ಪ್ರದೇಶದಲ್ಲಿನ ಎಲ್ಲಾ ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳ ಕರ್ತವ್ಯ ಪಾಳಿಯನ್ನು ಸಂಜೆ 6 ಗಂಟೆಗೆ ಒಳಗಾಗಿ ಬದಲಾಯಿಸುವಂತೆ ಹಾಗೂ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ತನಕ ಸಿಬ್ಬಂದಿಗಳು ರಸ್ತೆಗಳಲ್ಲಿ ಸಂಚರಿಸದಂತೆ ಸೂಚಿಸಲಾಗಿದೆ.