ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಅಂತ ಕರೆದು ಕಾಂಗ್ರೆಸ್ ಅವಮಾನಿಸಿದ್ದು, ಕೂಡಲೇ ಕ್ಷಮೆಯಾಚಿಸಬೇಕೆಂದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ನಿಂದಿಸಿ ಅಗೌರವ ತೋರಿದ್ದಾರೆಂದು ಸಂಸತ್ತಿನಲ್ಲಿ ಬಿಜೆಪಿ ಮಹಿಳಾ ಸಂಸದರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಈ ಹೇಳಿಕೆಗಳಿಗೆ ಕಾಂಗ್ರೆಸ್ ತಕ್ಷಣ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಲೋಕಸಭೆಯ ಕಲಾಪವನ್ನು ಸ್ಥಗಿತಗೊಳಿಸಿದರು.
ಬುಡಕಟ್ಟು ಮಹಿಳೆಯೊಬ್ಬರು ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿರುವುದನ್ನು ಕಾಂಗ್ರೆಸ್ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ರಾಷ್ಟ್ರಪತಿಗಳ ಬಗ್ಗೆ ಅನುಚಿತ ಹೇಳಿಕೆ ನೀಡಿದ್ದಾರೆಂದು ಕಿಡಿ ಕಾರಿದ್ದಾರಿದ್ದಲ್ಲದೆ, ಈ ಅಸಂಬದ್ಧ ಹೇಳಿಕೆ ದೇಶದ ಸಮಸ್ತ ಜನತೆಗೆ ಮಾಡಿದ ಅವಮಾನ ಎಂದರು.
ಅಧೀರ್ ರಂಜನ್ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೋನಿಯಾ ಗಾಂಧಿ ಅವರ ಪ್ರತಿಕೃತಿ ದಹಿಸಲು ಕರೆ ನೀಡಿದ್ದು, ಅಧೀರ್ ರಂಜನ್ ಹೇಳಿಕೆಗೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ದೇಶದ ಅತ್ಯುನ್ನತ ಬುಡಕಟ್ಟು ಜನಾಂಗದವರ ಅಸ್ಮಿತೆಗೆ ಸಾಕ್ಷಿಯಾಗಿ ನಿಂತಿರುವ ದ್ರೌಪದಿ ಮುರ್ಮು ಅವರನ್ನು ಅವಮಾನಿಸುವುದು. ಇದು ಕಾಂಗ್ರೆಸ್ ನಾಯಕರ ಸಂಸ್ಕೃತಿಯ ಪ್ರತಿಬಿಂಬ ಮಾತ್ರವಲ್ಲದೆ ದ್ವೇಷದ ಪ್ರದರ್ಶನವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಹೇಳಿಕೆಗೆ ಕಾಂಗ್ರೆಸ್ ಕೂಡಲೇ ಕ್ಷಮೆಯಾಚಿಸಬೇಕು. ರಾಷ್ಟ್ರಪತಿ ವಿರುದ್ಧ ಅನುಚಿತ ಹೇಳಿಕೆ ನೀಡಿದ ಅಧೀರ್ ರಂಜನ್ ಅವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಬಿಜೆಪಿ ಒತ್ತಾಯಿಸಿದೆ.