ಹೊಸ ದಿಗಂತ ವರದಿ, ಕಲಬುರಗಿ:
ಎಸ್.ಡಿ.ಪಿ.ಐ, ಪಿ.ಎಫ್.ಐ ಮುಖಂಡರ ಮನೆಗಳ ಮೇಲೆ ಎನ್.ಐ.ಎ ದಾಳಿಯ ವಿಚಾರದಲ್ಲಿ ಏನು ನಡೆದಿದೆ ಎನ್ನುವ ಬಗ್ಗೆ ವಿರೋಧ ಪಕ್ಷಗಳಿಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಈ ಹಂತದಲ್ಲಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದೇಶ ದ್ರೋಹದ ಕೆಲಸ ಯಾರೇ ಮಾಡಿದರು ಜಾತಿ, ಧರ್ಮ ನೋಡದೆ ಕ್ರಮ ಕೈಗೊಳ್ಳಬೇಕು
ನಗರದ ಲುಂಬಿನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ದ್ರೋಹದ ಕೆಲಸ ಯಾರೇ ಮಾಡಿದರು ಅವರ ಪಕ್ಷ, ಜಾತಿ, ಧರ್ಮ ನೋಡದೆ ಕ್ರಮ ಕೈಗೊಳ್ಳಬೇಕು. ಯಾವುದೇ ಸಂಸ್ಥೆ ಮೇಲೆ ಕ್ರಮ ತೆಗೆದುಕೊಳ್ಳುವಾಗ ಸಾಧಕ ಬಾಧಕ ನೋಡಬೇಕು. ಎನ್.ಐ.ಎ ದಾಳಿ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ, ಇಡಿ, ಸಿಬಿಐಯನ್ನು ಬಿಜೆಪಿ ದುರುಪಯೋಗ ಮಾಡಿಕೊಂಡಿರುವುದು ಮಾತ್ರ ಅಪ್ಪಟ ಸತ್ಯ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಕ್ಷ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸಲು ಸಿದ್ದವಿದ್ದೇನೆ. ಪಕ್ಷಕ್ಕೆ ನಿಷ್ಠೆಯಾಗಿ ಕೆಲಸ ಮಾಡುವೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಏನು ಹೇಳುತ್ತಾರೆ ಅದನ್ನು ಮಾಡುವುದಷ್ಟೇ ನಮ್ಮ ಕೆಲಸವಾಗಿದೆ. ವೈಯಕ್ತಿಕವಾಗಿ ರಾಹುಲ್ ಗಾಂಧಿ ಅವರೇ ಎಐಸಿಸಿ ಅಧ್ಯಕ್ಷರಾಗಬೇಕು ಎಂಬುವುದು ನನ್ನ ಅಭಿಪ್ರಾಯವಾಗಿದೆ. ಆದರೆ, ಅವರು ನಮ್ಮ ಕುಟುಂಬದಿಂದ ಯಾರೂ ಅಧ್ಯಕ್ಷರಾಗುವುದು ಬೇಡ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ ಎಂದು ತಿಳಿಸಿದರು.