ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶೇಷ ತೀವ್ರ ಮರುಪರಿಶೀಲನೆ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಲ್ಪಟ್ಟ ಮಾತ್ರಕ್ಕೆ ವ್ಯಕ್ತಿಯ ಭಾರತೀಯ ಪೌರತ್ವ ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನಾ ಅವರನ್ನೊಳಗೊಂಡ ಪೀಠವು, ಎಸ್ಐಆರ್ ಪ್ರಕ್ರಿಯೆಯಿಂದ ಹೊರಗಿಡಲಾದ ವ್ಯಕ್ತಿಗಳ ಮೇಲ್ಮನವಿ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಕೋರಿ ಪ್ರಸೇನ್ಜಿತ್ ಬೋಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿತು.
ಈ ವಿಚಾರದ ಬಗ್ಗೆ ನಮಗೆ ಸಂಪೂರ್ಣ ಅರಿವಿದೆ. ಬಿಹಾರ ಎಸ್ಐಆರ್ ಪ್ರಕರಣದ ತೀರ್ಪಿನಲ್ಲಿ ನಾವು ಸ್ಪಷ್ಟವಾಗಿ ಹೇಳಿದ್ದೇವೆ. ಚುನಾವಣಾ ಆಯೋಗಕ್ಕೆ ಇದರಲ್ಲಿ ಸಮಾನ ಜವಾಬ್ದಾರಿ ಇದೆ. ಯಾರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ನಿರ್ಧಾರ ಕೈಗೊಂಡ ತಕ್ಷಣವೇ, ಪೌರತ್ವ ಕಾಯ್ದೆಯಡಿ ಅಂತಿಮ ನಿರ್ಧಾರಕ್ಕಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಕರಣವನ್ನು ಕಳುಹಿಸಬೇಕು. ಆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ವ್ಯಕ್ತಿಯ ಪೌರತ್ವದ ಸ್ಥಾನಮಾನ ಮುಂದುವರಿಯುತ್ತದೆ ಎಂದು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹೇಳಿದರು.
ಅಂತೆಯೇ ಮೇಲ್ಮನವಿಗಳು ಬಾಕಿ ಇರುವ ಅವಧಿಯಲ್ಲಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲ್ಪಟ್ಟವರಿಗೆ ಸಾರ್ವಜನಿಕ ವಿತರಣೆ ವ್ಯವಸ್ಥೆ (PDS), ಅನ್ನಪೂರ್ಣ ಯೋಜನೆ ಹಾಗೂ ಜಾತಿ ಪ್ರಮಾಣಪತ್ರಗಳಂತಹ ಸರ್ಕಾರಿ ಸೌಲಭ್ಯಗಳನ್ನು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸುತ್ತಿದೆ ಎಂದು ಹಿರಿಯ ವಕೀಲರು ವಾದಿಸಿದರು.
ನೆಲಮಟ್ಟದಲ್ಲಿ ಇಂತಹವರಿಗೆ ಪೌರತ್ವಕ್ಕೆ ಸಂಬಂಧಿಸಿದ ಅನೇಕ ಹಕ್ಕುಗಳು ಮತ್ತು ಸೌಲಭ್ಯಗಳನ್ನು ನಿರಾಕರಿಸಲಾಗುತ್ತಿದೆ. 34 ಲಕ್ಷ ಮೇಲ್ಮನವಿಗಳು ಬಾಕಿ ಇರುವಾಗ ಕೇವಲ 38 ಸಾವಿರ ಪ್ರಕರಣಗಳಷ್ಟೇ ಇತ್ಯರ್ಥಗೊಂಡಿವೆ. ಉಳಿದ ಲಕ್ಷಾಂತರ ಜನರು ಮೇಲ್ಮನವಿಗಳ ವಿಚಾರಣೆ ಪೂರ್ಣಗೊಳ್ಳುವವರೆಗೂ ಈ ವಂಚನೆಯನ್ನು ಅನುಭವಿಸಬೇಕಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.



