ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಹೈಪ್ ನಿರ್ಮಿಸಿರುವ ಬಾಲಿವುಡ್ ಸಿನಿಮಾ ರಾಮಾಯಣಕ್ಕೆ ನೀಟ್ ಪ್ರತಿಭಟನೆಗೆ ಬಿಸಿ ಮುಟ್ಟಿದೆ. ಯಶ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಜಂಟಿಯಾಗಿ ನಿರ್ಮಿಸಿ, ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಕೆರಳಿಸಿರುವ ರಾಮಾಯಣ ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ.
ಶುಕ್ರವಾರ ದೆಹಲಿಯ ಭಾರತ್ ಮಂಟಪದಲ್ಲಿ ಮಾಧ್ಯಮಗಳಿಗೆ ಪ್ರೀಮಿಯರ್ ಪ್ರದರ್ಶಿಸಿದ ಬಳಿಕ ಅಧಿಕೃತವಾಗಿ ಜಾಗತಿಕ ಮಟ್ಟದಲ್ಲಿ ಟ್ರೇಲರ್ ಬಿಡುಗಡೆಯಾಗಬೇಕಿತ್ತು. ಆದರೆ, ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ದೆಹಲಿ ಸೇರಿದಂತೆ ಹಲವೆಡೆ ಯುವಜನರು ಹಾಗೂ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ದೇಶದ ಪ್ರಸ್ತುತ ಪರಿಸ್ಥಿತಿಗೆ ಸ್ಪಂದಿಸಿರುವ ‘ರಾಮಾಯಣ’ ಸಿನಿಮಾ ತಂಡ, ತಮ್ಮ ಅಧಿಕೃತ ಖಾತೆಯಲ್ಲಿ ಯುವಸಮೂಹವನ್ನು ಉದ್ದೇಶಿಸಿ ವಿಶೇಷ ಸಂದೇಶ ರವಾನಿಸಿದೆ.ನಮ್ಮ ದೇಶದ ಯುವಜನರೇ ನಮ್ಮ ಭವಿಷ್ಯ, ಆ ಭವಿಷ್ಯವನ್ನು ರಕ್ಷಿಸಲು ನಾವೆಲ್ಲರೂ ನಮ್ಮಿಂದಾದ ಅತ್ಯುತ್ತಮ ಪ್ರಯತ್ನವನ್ನು ಮಾಡೋಣ ಎಂದು ಬರೆದಿದೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಅವರ ಹಕ್ಕುಗಳ ಬೆಂಬಲಕ್ಕೆ ನಿಲ್ಲುವ ನಿಟ್ಟಿನಲ್ಲಿ ಟ್ರೇಲರ್ ಬಿಡುಗಡೆಯನ್ನು ಮುಂದಕ್ಕೆ ಹಾಕಿರುವುದಾಗಿ ಚಿತ್ರತಂಡ ಸ್ಪಷ್ಟಪಡಿಸಿದೆ.



