Wednesday, January 14, 2026
Wednesday, January 14, 2026
spot_img

ಪಂಜಾಬ್ ರಾಜಕೀಯದಲ್ಲಿ ಹೊಸ ವಿವಾದ: ಸಿಎಂ ಆಗೋಕೆ 500 ಕೋಟಿ ಬೇಕು ಎಂದ ಕಾಂಗ್ರೆಸ್ ನಾಯಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್ ರಾಜಕೀಯದಲ್ಲಿ ಮತ್ತೆ ವಾಕ್ಸಮರಕ್ಕೆ ದಾರಿ ಮಾಡಿಕೊಡುವಂತಹ ಹೇಳಿಕೆಯೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಹುದ್ದೆಗೆ ಹಣದ ಬೇಡಿಕೆ ಇರುತ್ತದೆ ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆ ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಹೇಳಿಕೆಯ ಬೆನ್ನಲ್ಲೇ ಕಾಂಗ್ರೆಸ್ ಒಳಗೇ ಅಸಮಾಧಾನದ ಸದ್ದು ಕೇಳಿ ಬಂದಿದೆ.

ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಮಾತನಾಡಿದ ನವಜೋತ್ ಕೌರ್ ಸಿಧು, 2027ರ ವಿಧಾನಸಭಾ ಚುನಾವಣೆಗೆ ತಮ್ಮ ಪತಿ ಹಾಗೂ ಮಾಜಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ಮಾತ್ರ ತಾವು ಸಕ್ರಿಯ ರಾಜಕೀಯಕ್ಕೆ ಮರಳುವ ಬಗ್ಗೆ ಯೋಚಿಸುತ್ತೇನೆ ಎಂದಿದ್ದಾರೆ.

ಪಕ್ಷದೊಳಗಿನ ಆಂತರಿಕ ಕಲಹಗಳು ಹಾಗೂ ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಲಾಬಿಯನ್ನೂ ಅವರು ಉಲ್ಲೇಖಿಸಿದ್ದು, ಕಾಂಗ್ರೆಸ್‌ನೊಳಗಿನ ಅಧಿಕಾರ ಸ್ಪರ್ಧೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆ ಪಡೆಯಲು 500 ಕೋಟಿ ರೂಪಾಯಿ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷ, ಕಾಂಗ್ರೆಸ್‌ನ ನಿಜ ಮುಖ ಬಹಿರಂಗವಾಗಿದೆ ಎಂದು ಆರೋಪಿಸಿದೆ. ಬಿಜೆಪಿ ಕೂಡ ಈ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸ್ಥಾನವೇ ಹರಾಜು ವಸ್ತುವಾಗಿದೆ ಎಂದು ಆರೋಪಿಸಿದೆ.

Most Read

error: Content is protected !!