ಹೊಸದಿಗಂತ ವರದಿ ಬೆಳಗಾವಿ:
ಗಡಿಭಾಗದಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ, ಕಾನೂನುಗಳ ಜಾರಿ ಹಾಗೂ ಶಾಂತಿ–ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ತಿಳಿಸಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿಯ ಅಧ್ಯಕ್ಷ ಪ್ರಕಾಶ್ ಮರಗಾಳೆ, ಮಾಜಿ ಶಾಸಕ ಮನೋಹರ ಕಿಣೇಕರ್ ಸೇರಿದಂತೆ ನಿಯೋಗವು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಬೆಳಗಾವಿಯಲ್ಲಿ ಕನ್ನಡಕ್ಕೆ ಶೇ.60 ಹಾಗೂ ಇತರೆ ಭಾಷೆಗಳಿಗೆ ಶೇ.40 ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ನಿಯಮವನ್ನು ಜಾರಿಗೊಳಿಸಬೇಕು ಹಾಗೂ ಭಾಷಾ ಅಲ್ಪಸಂಖ್ಯಾತರಿಗೆ ಕಾನೂನುಬದ್ಧ ಸೌಲಭ್ಯಗಳನ್ನು ನೀಡಬೇಕು ಎಂದು ಸಮಿತಿ ಒತ್ತಾಯಿಸಿತು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರು, ಮಹಾರಾಷ್ಟ್ರದಲ್ಲಿನ ಕನ್ನಡಿಗರು ಹಾಗೂ ಬೆಳಗಾವಿ ಗಡಿಭಾಗದ ಮರಾಠಿ ಭಾಷಿಕರ ಸಮಸ್ಯೆಗಳನ್ನು ಸಂವಿಧಾನಬದ್ಧವಾಗಿ ಚರ್ಚಿಸಿ ಪರಿಹರಿಸಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಭರವಸೆ ನೀಡಿದರು. ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಹಾಗೂ ಶಾಂತಿ ಕಾಪಾಡುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.



