ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದ ರಾಜಕೀಯ ವಾತಾವರಣ ಹೊಸ ತಿರುವು ಪಡೆದುಕೊಂಡಿದ್ದು, ನೂತನ ಸರ್ಕಾರ ಅಧಿಕಾರ ಸ್ವೀಕಾರಕ್ಕೆ ಸಜ್ಜಾಗಿದೆ. ಈ ನಡುವೆ ರಾಜ್ಯದಲ್ಲಿ ಭದ್ರತೆ, ಕಾನೂನು ಸುವ್ಯವಸ್ಥೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಕುರಿತು ಪ್ರಮುಖ ಘೋಷಣೆಗಳು ಕೇಳಿಬಂದಿವೆ. ಆಡಳಿತ ಬದಲಾವಣೆಯೊಂದಿಗೆ ಜನರಲ್ಲಿ ಹೊಸ ನಿರೀಕ್ಷೆಗಳೂ ಮೂಡಿವೆ.
ಕೋಲ್ಕತ್ತಾದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ಅವರು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದೆ.
ಇದನ್ನೂ ಓದಿ:
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೊಸ ಆಡಳಿತದಲ್ಲಿ ರಾಜ್ಯದ ಗಡಿಭಾಗಗಳಲ್ಲಿ ಅಕ್ರಮ ಒಳನುಸುಳುವಿಕೆ ಹಾಗೂ ಗೋವುಗಳ ಕಳ್ಳಸಾಗಣೆಂತಹ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ತಡೆ ಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾನೂನು ಜಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿ, ಭದ್ರತಾ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸಂದೇಶ ನೀಡಿದರು.
ಹಿಂದಿನ ಆಡಳಿತಾವಧಿಯಲ್ಲಿ ರಾಜಕೀಯ ವಾತಾವರಣದಲ್ಲಿ ವಿಭಜನೆ ಹಾಗೂ ಅಪರಾಧ ಚಟುವಟಿಕೆಗಳು ಹೆಚ್ಚಾಗಿದ್ದವು ಎಂದು ಟೀಕಿಸಿದ ಅವರು, ಹೊಸ ಸರ್ಕಾರ ಜನರ ವಿಶ್ವಾಸಕ್ಕೆ ತಕ್ಕಂತೆ ಪಾರದರ್ಶಕ ಮತ್ತು ಕಾನೂನುಬದ್ಧ ಆಡಳಿತ ನೀಡಲಿದೆ ಎಂದು ಹೇಳಿದರು. ಬಂಗಾಳದಲ್ಲಿ ರಾಜಕೀಯ ಬದಲಾವಣೆ ಈಗ ಆಡಳಿತದ ದಿಕ್ಕನ್ನೇ ಬದಲಿಸುವ ಸೂಚನೆ ನೀಡಿದೆ.



