February 8, 2026
Sunday, February 8, 2026
spot_img

ಕಾಶಿ ವಿಶ್ವನಾಥನ ದರುಶನಕ್ಕೆ ಹೊಸ ನಿಯಮ: ಜನವರಿ 3ರವರೆಗೆ ‘ಸ್ಪರ್ಶ ದರುಶನ’ಕ್ಕೆ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥ ಧಾಮಕ್ಕೆ ಹರಿದುಬರುತ್ತಿರುವ ಭಕ್ತರ ಸಂಖ್ಯೆ ಅನಿರೀಕ್ಷಿತವಾಗಿ ಏರಿಕೆಯಾಗಿದೆ. ಭಕ್ತಾದಿಗಳ ಸುಗಮ ದರ್ಶನ ಹಾಗೂ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು, ಕಾಶಿ ವಿಶ್ವನಾಥ ದೇವಾಲಯದ ಆಡಳಿತ ಮಂಡಳಿಯು ಇಂದಿನಿಂದ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದೆ.

ಡಿಸೆಂಬರ್ 25 ರಿಂದ ಜನವರಿ 3 ರವರೆಗೆ ಭಕ್ತರಿಗೆ ಶಿವಲಿಂಗದ ಸ್ಪರ್ಶ ದರ್ಶನವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಹೆಚ್ಚುತ್ತಿರುವ ಜನಸಂದಣಿಯನ್ನು ನಿಯಂತ್ರಿಸಲು ಎಲ್ಲರಿಗೂ ಸರತಿ ಸಾಲಿನಲ್ಲಿ ನಿಂತು ದೂರದಿಂದಲೇ ದೇವರನ್ನು ನೋಡುವ ವ್ಯವಸ್ಥೆ ಮಾಡಲಾಗಿದೆ.

ಈ ಅವಧಿಯಲ್ಲಿ ಯಾವುದೇ ಪ್ರೋಟೋಕಾಲ್ ಅಥವಾ ವಿಐಪಿ ದರ್ಶನಗಳಿಗೆ ಅವಕಾಶವಿರುವುದಿಲ್ಲ. ವಿಶೇಷ ಫೋಟೋ ಕಾಲ್‌ಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ವಿಶ್ವ ಭೂಷಣ್ ಮಿಶ್ರಾ ಮಾತನಾಡಿ, “ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷದ ರಜಾದಿನಗಳು ಇರುವುದರಿಂದ ಕಾಶಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಸುಮಾರು ಐದು ಲಕ್ಷಕ್ಕೂ ಹೆಚ್ಚು ಮಂದಿ ದರ್ಶನ ಪಡೆಯುವ ಸಾಧ್ಯತೆಯಿದೆ. ಭಕ್ತರ ಹಿತದೃಷ್ಟಿಯಿಂದ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಶ್ರೀ ಕಾಶಿ ವಿಶ್ವನಾಥ ಕಾರಿಡಾರ್ ನಿರ್ಮಾಣದ ನಂತರ ವಾರಾಣಸಿಗೆ ಬರುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಈ ಬಾರಿಯ ಹೊಸ ವರ್ಷದ ಸಂದರ್ಭದಲ್ಲಿ ಯಾತ್ರಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮಂಡಳಿಯು ಈ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಆಡಳಿತ ಮಂಡಳಿಯೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !