ಹೊಸದಿಗಂತ ವರದಿ ,ಶಿವಮೊಗ್ಗ:
ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಹಾಗೂ ಶಿವಮೊಗ್ಗದಲ್ಲಿ ತುಂಗಾ ನದಿ ದಡದಲ್ಲಿ ನಡೆಸಲಾಗಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣಗಳಿಗೆ ಸಂಬಂಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಗುರುವಾರ ನಗರದಲ್ಲಿ ಶೋಧ ನಡೆಸಿದೆ ಎಂದು ತಿಳಿದುಬಂದಿದೆ.
ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಶಾರೀಕ್ ಜೊತೆ ಸಂಪರ್ಕದಲ್ಲಿದ್ದ ವ್ಯಕ್ತಿಯ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಜೊತೆಗೆ ಯುವಕನೋರ್ವನನ್ನು ವಶಕ್ಕೆ ಪಡೆದು ಎರಡು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಗರದ ಮಂಜುನಾಥ ಬಡಾವಣೆಯ ಮನೆಯೊಂದರಲ್ಲಿ ಶೋಧ ನಡೆಸಲಾಗಿದೆ. ಕೆಲ ದಾಖಲೆಗಳನ್ನೂ ವಶಕ್ಕೆ ಪಡೆಯಲಾಗಿದೆ. ಬಾಪೂಜಿ ನಗರದಲ್ಲಿ ಕೂಡ ಶೋಧ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತುಂಗಾನದಿ ತೀರದಲ್ಲಿ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣವನ್ನು ಎರಡು ತಿಂಗಳ ಹಿಂದೆ ಶಿವಮೊಗ್ಗ ಪೊಲೀಸರು ಪತ್ತೆ ಹಚ್ಚಿದ್ದರು. ಬಳಿಕ ಸಯ್ಯದ್ ಯಾಸೀನ್, ಮಾಜ್ ಮುನೀರ್ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿ ಇತ್ತೀಚೆಗೆ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡು ಸಿಕ್ಕಿಬಿದ್ದಿದ್ದನು.