ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಗೆ ಅವಕಾಶವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದರ ವಿರುದ್ಧ ವಿವಿಧ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಅವರು ಈ ಹೇಳಿಕೆ ನೀಡಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾಳೆ ಸಾರ್ವಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ಬಂದ್ ವಿಚಾರ ಒಂದಷ್ಟು ಸೂಚನೆಗಳ ನೀಡಿವೆ, ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಜನರಲ್ಲಿ ಮನವಿ ಮಾಡಿದರು.
ನಾಳೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ
ನಾಳೆ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಗೆ ಆನ್ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ತಮಿಳುನಾಡಿನವರು 11,000 ಸಾವಿರ ಕ್ಯೂಸೆಕ್ ನೀರಿಗೆ ಬೇಡಿಕೆ ಇಟ್ಟಿದ್ದು, ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಲಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಈಗ ಸಹಜವಾಗಿ 2,000 ಕ್ಯೂಸೆಕ್ ನೀರು ಹೋಗುತ್ತಿರಬಹುದು ಎಂದು ಅವರು ತಿಳಿಸಿದರು.
ಹಿರಿಯ ಕೃಷಿ ತಜ್ಞರು, ನೀರಾವರಿ ತಂತ್ರಜ್ಞರ ಸಭೆ ಕರೆದಿದ್ದು, ಅಲ್ಲಿ ಚರ್ಚೆ ಮಾಡಲಾಗುವುದು. ಯಾರು ಭಾಗವಹಿಸುತ್ತಾರೆ ಎಂದು ಹೆಸರು ಬಹಿರಂಗಪಡಿಸಲು ಆಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.