ಹೊಸದಿಗಂತ ಡಿಜಿಟಲ್ ಡೆಸ್ಕ್:
ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳ ಐಟಿ ಸಚಿವರಿಗೆ ಆಹ್ವಾನ ನೀಡದೇ ರಾಜಕೀಯ ಪ್ರೇರಿತ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ದೇಶದ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಕೇಂದ್ರದ ಯೋಜನೆಗಳಿಗೆ ಕರ್ನಾಟಕ ಬೆಂಬಲ ನೀಡಿದೆ. ಆದರೆ ರಾಷ್ಟ್ರೀಯ ಮಟ್ಟದ ಎಐ ವೇದಿಕೆಯಲ್ಲಿ ರಾಜ್ಯವನ್ನು ಹೊರಗಿಡುವುದು ಸರಿಯಲ್ಲ ಎಂದು ಖರ್ಗೆ ಹೇಳಿದ್ದಾರೆ. ಮಾಜಿ ಇನ್ಫೋಸಿಸ್ ಸಿಎಫ್ಒ ಮೋಹನ್ದಾಸ್ ಪೈ ಅವರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಅನೇಕ ಎಐ ಉದ್ಯಮಿಗಳು ಭಾಗವಹಿಸಿದ್ದರೂ ರಾಜ್ಯ ಸರ್ಕಾರವನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:
ಮಿಸ್ಟ್ರಲ್ ಎಐ, ಗೂಗಲ್, ಹಾರ್ವಿ, ಎಲೆವನ್ಲ್ಯಾಬ್ಸ್, ಡಿಸ್ನಿ, ಆಂಥ್ರೋಪಿಕ್ ಸೇರಿದಂತೆ ಹಲವು ಜಾಗತಿಕ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವುದನ್ನು ಉಲ್ಲೇಖಿಸಿ, ಕರ್ನಾಟಕ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ರಾಜ್ಯಗಳ ಸಾಧನೆಗಳನ್ನು ಕೇಂದ್ರ ಸರ್ಕಾರ ಗುರುತಿಸಿ, ಸಮಾನ ಗೌರವ ನೀಡಬೇಕು ಎಂಬುದು ತಮ್ಮ ಆಗ್ರಹ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.



