ಹೊಸದಿಗಂತ ಡಿಜಿಟಲ್ ಡೆಸ್ಕ್;
ಹೈದರಾಬಾದ್ ನಗರದಲ್ಲಿ ನವೆಂಬರ್ 28 ರವರೆಗೆ ಮೆರವಣಿಗೆ, ಪ್ರತಿಭಟನೆ ಮತ್ತು ಸಾರ್ವಜನಿಕ ಸಭೆಗಳನ್ನು ನಿಷೇಧಿಸಿ ಹೈದರಾಬಾದ್ ಪೊಲೀಸರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ಹೈದರಾಬಾದ್ ಪೊಲೀಸ್ ಕಮಿಷನರ್ ಸಿ ವಿ ಆನಂದ್, ನಗರದಲ್ಲಿ ಹಲವಾರು ಸಂಘಟನೆಗಳು/ಪಕ್ಷಗಳು ಧರಣಿ ಮತ್ತು ಪ್ರತಿಭಟನೆಗಳನ್ನು ನಡೆಸುವ ಮೂಲಕ ಗಲಭೆ ಸೃಷ್ಟಿಸಲು ಯತ್ನಿಸುತ್ತಿವೆ ಎಂಬ ವಿಶ್ವಾಸಾರ್ಹ ಮಾಹಿತಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹೈದರಾಬಾದ್ ನಗರದಲ್ಲಿ ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಲು, ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆ, ಪ್ರತಿಭಟನೆ, ಧರಣಿಗಳು, ರ್ಯಾಲಿಗಳು ಅಥವಾ ಸಾರ್ವಜನಿಕ ಸಭೆಗಳನ್ನು ಅನುಮತಿಸಲಾಗುವುದಿಲ್ಲ. ಯಾವುದೇ ಭಾಷಣ, ಸನ್ನೆಗಳು ಅಥವಾ ಚಿತ್ರಗಳು, ಯಾವುದೇ ಫಲಕಗಳು, ಧ್ವಜಗಳು ಮತ್ತು ಎಲೆಕ್ಟ್ರಾನಿಕ್ ರೂಪದ ಯಾವುದೇ ರೀತಿಯ ಸಂದೇಶಗಳನ್ನು ಪ್ರದರ್ಶಿಸುವುದನ್ನು ಸಹ ನಿಷೇಧಿಸಲಾಗಿದೆ. ಇದರಿಂದ ಹೈದರಾಬಾದ್ನ ಮಿತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆದಾಗ್ಯೂ, ಶಾಂತಿಯುತ ಧರಣಿ ಮತ್ತು ಪ್ರತಿಭಟನೆಗಳನ್ನು ಇಂದಿರಾ ಪಾರ್ಕ್ ಧರ್ನಾ ಚೌಕ್ನಲ್ಲಿ ಮಾತ್ರ ಅನುಮತಿಸಲಾಗಿದೆ. ಹೈದರಾಬಾದ್ ಮತ್ತು ಸಿಕಂದರಾಬಾದ್ನಲ್ಲಿ ಬೇರೆಲ್ಲಿಯೂ ಯಾವುದೇ ಧರಣಿ ಅಥವಾ ಪ್ರತಿಭಟನೆಗೆ ಅನುಮತಿ ಇಲ್ಲ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ಈ ಆದೇಶವು ಅಕ್ಟೋಬರ್ 27 ರಂದು ಸಂಜೆ 6 ರಿಂದ ನವೆಂಬರ್ 28 ರ ಸಂಜೆ 6 ರವರೆಗೆ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.