ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸೆಂಬರ್ 19 ರಿಂದ 29 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಯಾರೊಬ್ಬ ಶಾಸಕ-ಸಚಿವರೂ ಗೈರಾಗುವಂತಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಾಕೀತು ಮಾಡಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ಕಾಗೇರಿ, ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ಹಾಜರಾಗಿರಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಅನುಮತಿ ಮೇರೆಗೆ ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದರು.
ಜನರ ಅಶೋತ್ತರಗಳನ್ನು ಈಡೇರಿಸುವ ಸಂಸದೀಯ ಮಾರ್ಗ ಅಧಿವೇಶನದ ಉದ್ದೇಶ. ಜನರ ಭಾವನೆಗಳಿಗೆ ಸ್ಪಂದಿಸಿ ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಇದು ಬೆಳಗಾವಿಯಲ್ಲಿ ನಡೆಯುತ್ತಿರುವ 10ನೇ ಅಧಿವೇಶನವಾಗಿದೆ. ಯಾವುದೇ ಕೋವಿಡ್ ನಿರ್ಬಂಧಗಳು ಇರುವುದಿಲ್ಲ. 6 ಮಸೂದೆಗಳನ್ನು ಈ ಅಧಿವೇಶನದಲ್ಲಿ ಜಾರಿಗೆ ತರಲಾಗುತ್ತಿದೆ ಎಂದರು.
ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅಧಿವೇಶನದಲ್ಲಿ ಆದ್ಯತೆ ನೀಡಲಾಗುವುದು. ವಿಶೇಷವಾಗಿ ಈ ಬಾರಿಯ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು.