ಹೊಸದಿಗಂತ ವರದಿ,ಮೈಸೂರು:
ಲೋಕಸಭೆಗೆ ಚುನಾವಣೆ ಘೋಷಣೆಯಾದ ನಂತರ ಯಾವುದೇ ಹೊಸ ಕಾಮಗಾರಿಗಳನ್ನು ಪ್ರಾರಂಭಿಸುವoತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿಯ ಡಿ.ದೇವರಾಜ ಅರಸು ಸಭಾಂಗಣದಲ್ಲಿ ನಡೆದ ಚುನಾವಣಾ ಮಾದರಿ ನೀತಿ ಸಂಹಿತೆ ಹಾಗೂ ಲೋಕೋಪಯೋಗಿ, ನೀರಾವರಿ, ಚೆಸ್ಕಾಂ ಹಾಗೂ ವಿವಿಧ ತಾಂತ್ರಿಕ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪ್ರಸ್ತುತ ಪ್ರಾರಂಭಗೊoಡು ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ನಡೆಸಬಹುದಾಗಿರುತ್ತದೆ. ಪ್ರಸ್ತುತ ಪ್ರಾರಂಭಗೊoಡು ಚಾಲ್ತಿಯಲ್ಲಿರುವ ಹಾಗೂ ಘೋಷಣೆ ಮಾಡಲು ಬಾಕಿ ಇರುವ ಕಾಮಗಾರಿಗಳ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಚುನಾವಣೆ ಘೋಷಣೆಯಾದ ೨೪ ಗಂಟೆಗಳಲ್ಲಿ ಸರ್ಕಾರಿ ಕಚೇರಿ ಕಟ್ಟಡ ಸ್ಥಳಗಳಲ್ಲಿ, ೪೮ ಗಂಟೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ೭೨ ಗಂಟೆಗಳಲ್ಲಿ ಖಾಸಗಿ ಕಟ್ಟಡ ಅಥವಾ ಸ್ಥಳಗಳಲ್ಲಿ ಇರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ ಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು.
ಎಲ್ಲಾ ಮತದಾರರು ಹಾಗೂ ಅಧಿಕಾರಿಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಚುನಾವಣೆಯ ದಿನದಂದು ಅಧಿಕಾರಿಗಳು ಅಥವಾ ಸಿಬ್ಬಂದಿಗಳು ಅವಶ್ಯಕತೆ ಇರುವ ಪೋರ್ಟಲ್ ಅಥವಾ ಎಲೆಕ್ಷನ್ ಡ್ಯೂಟಿ ಸರ್ಟಿಫಿಕೇಟ್ಗೆ ನಿಗದಿತ ನಮೂನೆಯಲ್ಲಿ ಮನವಿ ಸಲ್ಲಿಸಬೇಕು ಎಂದರು.
ಸಭೆಯಲ್ಲಿ ಜಿ.ಪಂ ಸಿಇಒ ಕೆ.ಎಂ ಗಾಯಿತ್ರಿ, ನಗರಪಾಲಿಕೆ, ಮುಡಾ ಆಯುಕ್ತರುಗಳು, ಜಿಲ್ಲೆಯ ಎಲ್ಲಾ ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.