ಹೊಸದಿಗಂತ ಡಿಜಿಟಲ್ ಡೆಸ್ಕ್
ನರೇಂದ್ರ ಮೋದಿ ಸರ್ಕಾರ ಅಧಿಕಾರದಲ್ಲಿ ಇರುವವರೆಗೆ ಯಾರೂ ದೇಶದ ಒಂದಿಂಚು ಭೂಮಿಯನ್ನೂ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅರುಣಾಚಲ ಪ್ರದೇಶದ ಎಲ್ಎಸಿ ಯಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವಿನ ಘರ್ಷಣೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಸಂಸತ್ ನಲ್ಲಿ ಪ್ರತಿಪಕ್ಷಗಳು ಒತ್ತಾಯಿಸಿದ್ದವು. ಈ ವಿಚಾರವಾಗಿ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.
ಸಂಸತ್ ಭವನದ ಹೊರಗೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಭಾರತೀಯ ಸೈನಿಕರ ಶೌರ್ಯವನ್ನು ಶ್ಲಾಘಿಸಿದರು. ನಾನು ಸ್ಪಷ್ಟವಾಗಿ ಹೇಳಬಯಸುತ್ತೇನೆ… ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ನಮ್ಮ ಒಂದು ಇಂಚು ಭೂಮಿಯನ್ನು ಯಾರೂ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ರಾಜೀವ್ ಗಾಂಧಿ ಫೌಂಡೇಶನ್ನ ಎಫ್ಸಿಆರ್ಎ [ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ] ರದ್ದತಿ ಕುರಿತು ಪ್ರಶ್ನೆಗಳನ್ನು ತಪ್ಪಿಸಲು ಸಂಸತ್ತಿನಲ್ಲಿ ಕಾಂಗ್ರೆಸ್ ಗಡಿ ವಿಷಯವನ್ನು ಪ್ರಸ್ತಾಪಿಸಿದೆ ಎಂದು ವಾಗ್ದಾಳಿ ನಡೆಸಿದರು.
ರಾಜೀವ್ ಗಾಂಧಿ ಫೌಂಡೇಶನ್ (ಆರ್ಜಿಎಫ್), ಚೀನಾ ರಾಯಭಾರ ಕಚೇರಿಯಿಂದ ₹ 1.35 ಕೋಟಿ ಪಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಇದು ಎಫ್ಸಿಆರ್ಎ ನಿಯಮಗಳಿಗೆ ಅನುಸಾರವಾಗಿಲ್ಲದ ಕಾರಣ ಅದರ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.
ನೆಹರೂ ಅವರ ಚೀನಾದ ಮೇಲಿನ ಪ್ರೀತಿಯಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸ್ಥಾನವನ್ನು ತ್ಯಾಗ ಮಾಡಲಾಗಿದೆ ಎಂದು ಶಾ ಟೀಕಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ