ಹೊಸದಿಗಂತ ವರದಿ,ಶಿವಮೊಗ್ಗ:
ಬಿಜೆಪಿ ಶಾಸಕರನ್ನು ದಾರಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯನವರ ಸಂಪರ್ಕದಲ್ಲಿ ಯಾರೂ ಇಲ್ಲ ಎಂದು ರೇಷ್ಮೆ, ಕ್ರೀಡಾ ಸಚಿವ ನಾರಾಯಣಗೌಡ ಹೇಳಿದರು.
ಗಣರಾಜ್ಯೋತ್ಸ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ 140ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂಬ ಉದ್ದೇಶದಲ್ಲಿ ಬಿಜೆಪಿ ಕೆಲಸ ಮಾಡುತ್ತಿದೆ. ಎಲ್ಲಾ ಶಾಸಕರು ಒಗ್ಗಟ್ಟಾಗಿ ಇದ್ದಾರೆ. ಇದನ್ನು ಸಹಿಸದೆ ತಮ್ಮ ಸಂಪರ್ಕದಲ್ಲಿ ಬಿಜೆಪಿ ಶಾಸಕರು ಇದ್ದಾರೆಂದು ಹೇಳುವ ಮೂಲಕ ಅನುಮಾನ ಬರುವಂತೆ ಮಾಡುತ್ತಿದ್ದಾರೆ. ಇದು ಫಲಿಸುವುದಿಲ್ಲ ಎಂದರು.
ಜಿಲ್ಲಾ ಉಸ್ತುವಾರಿಗಳ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಮುಖ್ಯಮಂತ್ರಿಗಳ ತೀರ್ಮಾನ. ಇದರಿಂದ ಅಭಿವೃದ್ಧಿಗೆ ಯಾವುದೇ ಹಿನ್ನಡೆ ಆಗುವುದಿಲ್ಲ. ನನ್ನ ಜಿಲ್ಲೆ ಮಂಡ್ಯದಲ್ಲಿ ಹಾಗೂ ಶಿವಮೊಗ್ಗದಲ್ಲಿಯೂ ಅಭಿವೃದ್ಧಿ ಕೆಲಸಗಳು ನಿಲ್ಲುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.