ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಾಯುಕ್ತ ಎಸ್ಐಟಿ ಮುಖ್ಯಸ್ಥರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ಎಫ್ಐಆರ್ಗೆ ತಡೆಯಾಜ್ಞೆಯಿದ್ದಾಗ, ಅದೇ ಆರೋಪದಲ್ಲಿ ಈಗಾಗಲೇ ಮಂಜೂರಾಗಿದ್ದ ನಿರೀಕ್ಷಣಾ ಜಾಮೀನ್ನು ರದ್ದುಕೋರಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ಗೆ ಅಕ್ರಮವಾಗಿ 550 ಎಕರೆ ಜಮೀನನ್ನು ಗಣಿಗಾರಿಕೆಗೆ ನೀಡಿದ ಆರೋಪ ಸಂಬಂಧ ಈಗಾಗಲೇ ಮಂಜೂರಾಗಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಲೋಕಾಯುಕ್ತ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮನವಿ ಅಮಾನತ್ತಿನಲ್ಲಿಡಬೇಕು ಎಂದು ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ರಜಾಕಾಲದ ಏಕ ಸದಸ್ಯ ಪೀಠಈ ಸಂಬಂಧ ವಿಚಾರಣಾ ನ್ಯಾಯಾಲಯವೇ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿತು. ಜೊತೆಗೆ, ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್ಗೆ ಜಮೀನು ಮಂಜೂರು ಮಾಡಿದ ಪ್ರಕರಣ ದಾಖಲಾಗಿ ಹಲವು ವರ್ಷ ಆದರೂ, ಆರೋಪ ಪಟ್ಟಿ ಏಕೆ ಸಲ್ಲಿಸಿಲ್ಲ ಎಂದು ಪ್ರಶ್ನಿಸಿತು.
ಅಲ್ಲದೇ, ರಾಜ್ಯಪಾಲರು ಅನುಮತಿ ನೀಡಿಲ್ಲದ ಕುರಿತ ಸುಬ್ರಹ್ಮಣ್ಯಸ್ವಾಮಿ ವಿರುದ್ಧದ ಮನಮೋಹನ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶವಿದ್ದು, ಅದನ್ನು ಏಕೆ ಅನುಸರಿಸಿಲ್ಲ?. ಎಲ್ಲ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ಗೆ ಹೋಗುತ್ತೀರಿ. ಇಲ್ಲಿ ಏಕೆ ಹೋಗಿಲ್ಲ ಎಂದು ಮೌಖಿಕವಾಗಿ ಪ್ರಶ್ನಿಸಿ ಅರ್ಜಿ ಇತ್ಯರ್ಥ ಪಡಿಸಿ ಆದೇಶಿಸಿತು.