ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ದೇವಾಲಗಳನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ದೇವಾಲಯಗಳನ್ನು ಮುಜರಾಯಿ ವ್ಯಾಪ್ತಿಗೆ ತರಲು ನೋಟಿಸ್ ಕೊಡಲಾಗುತ್ತಿದೆ ಎಂಬ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಕೆಲವು ಹಿಂದು ಸಂಘಟನೆಗಳಿಗೆ ಮಾಹಿತಿ ಕೊರತೆಯಿಂದ ತಪ್ಪು ತಿಳುವಳಿಕೆ ಉಂಟಾಗಿದೆ. ನಮ್ಮ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಹಣ ದುರಪಯೋಗ, ಆಡಳಿತ ಮಂಡಳಿ ಕಲಹಗಳಿಂದ ಕೆಲವು ದೇವಾಲಯಗಳ ವಿವಾದ ನ್ಯಾಯಾಲಯದ ಮೆಟ್ಟಿಲೇರುತ್ತಿದೆ. ಈ ರೀತಿಯ ಸಂದರ್ಭಗಳಲ್ಲಿ ಹಿಂದೆ ಕೆಲವು ದೇವಾಲಯಗಳನ್ನು ಇಲಾಖೆ ವಶಕ್ಕೆ ಪಡೆದುಕೊಂಡಿದೆ. ಆದರೆ ನಮ್ಮ ಸರ್ಕಾರ ಬಂದ ಮೇಲೆ ಯಾವ ದೇವಾಲಯವನ್ನೂ ತೆಗೆದುಕೊಂಡಿಲ್ಲ, ತೆಗೆದುಕೊಳ್ಳುವ ಉದ್ದೇಶವೂ ನಮಗಿಲ್ಲ ಎಂದು ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ