ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳ ವಿಮಾನಗಳಿಗೆ ದೆಹಲಿ ಅಥವಾ ಸಮೀಪದ ಪ್ರದೇಶವನ್ನು ಪ್ರವೇಶಿಸಲು ಯಾವುದೇ ನಿರ್ಬಂಧ ಹೇರಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಶನಿವಾರ ಸ್ಪಷ್ಟಪಡಿಸಿದೆ.
ಹೆಲಿಕಾಪ್ಟರ್ ಹಾರಾಟಕ್ಕೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ ಈ ಸ್ಪಷ್ಟನೆ ನೀಡಿದೆ.ಖಾಸಗಿ ವಿಮಾನಗಳ ಹಾರಾಟಕ್ಕೆ ಗೃಹ ಸಚಿವಾಲಯದ ಅನುಮತಿ ಅಗತ್ಯವಿದೆ ಎಂದೂ ತಿಳಿಸಿದೆ.
ಜಿ-20 ಶೃಂಗಸಭೆ ಇರುವ ಕಾರಣ ರಾಜಸ್ಥಾನದ ಸಿಕಾರ್ನಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಸರ್ಕಾರ ಅನುಮತಿ ನಿರಾಕರಿಸಿತು ಎಂದು ಗೆಹಲೋತ್ ಆರೋಪಿಸಿದ್ದರು.
ಅದೇ ರೀತಿ ದೆಹಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಇರುವ ಕಾರಣ ಜಿ-20 ಅಂಗವಾಗಿ ಏರ್ಪಡಿಸಿರುವ ಭೋಜನಕೂಟದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ’ ಎಂದು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದರು.
ಆದ್ರೆ ರಾಜಸ್ಥಾನ ಮುಖ್ಯಮಂತ್ರಿಗಳು ಸಿಕಾರ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ಗಾಗಿ ಮನವಿ ಸಲ್ಲಿಸಿದ್ದರು. ಎಲ್ಲಾ ಕಡೆಗಳಲ್ಲಿ ಅನುಮತಿ ನೀಡಲಾಗಿದೆ’ ಎಂದು ಕೇಂದ್ರ ಸರಕಾರ ತಿಳಿಸಿದೆ.
ಗೃಹ ಸಚಿವಾಲಯದ ಸ್ಪಷ್ಟನೆ ಕುರಿತು ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಸರ್ಕಾರ, ತಪ್ಪು ಮಾಹಿತಿ ನೀಡುವ ಮೂಲಕ ಜನರಲ್ಲಿ ಗೊಂದಲ ಉಂಟುಮಾಡುವ ವಿಫಲ ಯತ್ನ ಮಾಡಿದೆ’ ಎಂದು ಹೇಳಿದ್ದಾರೆ.